ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಸೇರಿದಂತೆ ಕ್ರಿಕೆಟ್ನ ಎಲ್ಲ ಮೂರು ವಿಭಾಗಗಳಲ್ಲೂ ನಂಬಲಾಗದ ರೀತಿಯ ಆಲ್ರೌಂಡರ್ ಪ್ರದರ್ಶನ ನೀಡಿರುವ ರವೀಂದ್ರ ಜಡೇಜ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಇಲ್ಲಿನ ವಾಂಖೆಡೆ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ 69 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಇದರೊಂದಿಗೆ ಸತತ ನಾಲ್ಕು ಗೆಲುವುಗಳೊಂದಿಗೆ ಅಜೇಯ ಓಟ ಮುಂದುವರಿಸಿದ್ದ ವಿರಾಟ್ ಕೊಹ್ಲಿ ಪಡೆಗೆ ಟೂರ್ನಿಯಲ್ಲಿ ಮೊದಲ ಸೋಲಿನ ಶಾಕ್ ನೀಡಿದೆ. ಅಷ್ಟೇ ಯಾಕೆ ಅಂಕಪಟ್ಟಿಯಲ್ಲಿ ಆರ್ಸಿಬಿಯನ್ನು ಹಿಂದಿಕ್ಕಿದ ಮಹೇಂದ್ರ ಸಿಂಗ್ ಧೋನಿ ಬಳಗವು ಅಗ್ರಸ್ಥಾನಕ್ಕೇರಿದೆ.
ಮೊದಲು ಬ್ಯಾಟಿಂಗ್ನಲ್ಲಿ ಕೇವಲ 28 ಎಸೆತಗಳಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಸಿಕ್ಸರ್ ನೆರವಿನಿಂದ ಅಜೇಯ 62 ರನ್ ಗಳಿಸಿದ ಜಡೇಜ, ಚೆನ್ನೈ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 191 ರನ್ಗಳ ಬೃಹತ್ ಮೊತ್ತ ಪೇರಿಸಲು ನೆರವಾದರು. ಆರ್ಸಿಬಿ ವೇಗಿ ಹರ್ಷಲ್ ಪಟೇಲ್ ಎಸೆದ ಇನ್ನಿಂಗ್ಸ್ನ ಅಂತಿಮ ಓವರ್ನಲ್ಲಿ ಐದು ಸಿಕ್ಸರ್ ಸೇರಿದಂತೆ ಒಟ್ಟು 37 ರನ್ ಚಚ್ಚಿದ್ದರು.
ಬಳಿಕ ಬೌಲಿಂಗ್ನಲ್ಲಿ ಮೂರು ವಿಕೆಟ್ ಹಾಗೂ ಒಂದು ರನೌಟ್ ಮಾಡಿದ ಜಡೇಜ, ಆರ್ಸಿಬಿ ತಂಡವನ್ನು 122 ರನ್ಗಳಿಗೆ ಕಟ್ಟಿ ಹಾಕುವಲ್ಲಿ ನೆರವಾದರು. ಈ ಮೂಲಕ ಚೆನ್ನೈ ತಂಡದ ಸತತ ನಾಲ್ಕನೇ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.