ಬೌಲರ್ಗಳ ಸಾಂಘಿಕ ದಾಳಿಯ ಬಳಿಕ ಬ್ಯಾಟ್ಸ್ಮನ್ಗಳ ಸಮಯೋಚಿತ ಆಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಬುಧವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಏಳು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ಪ್ಲೇ-ಆಫ್ ಪ್ರವೇಶದತ್ತ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಆರ್ಸಿಬಿ ಬೌಲರ್ಗಳ ನಿಖರ ದಾಳಿಗೆ ತತ್ತರಿಸಿದ ರಾಜಸ್ಥಾನ್, ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಬಳಿಕ ಗುರಿ ಬೆನ್ನತ್ತಿದ ಆರ್ಸಿಬಿ 17.1 ಓವರ್ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಗ್ಲೆನ್ ಮ್ಯಾಕ್ಸ್ವೆಲ್ 30 ಎಸೆತಗಳಲ್ಲಿ ಅಜೇಯ ಅರ್ಧಶತಕ ಬಾರಿಸಿ ಅಬ್ಬರಿಸಿದರು. ಶ್ರೀಕರ್ ಭರತ್ (44) ಸಹ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
ಬೌಲಿಂಗ್ನಲ್ಲಿ ಹರ್ಷಲ್ ಪಟೇಲ್ ಮೂರು ಮತ್ತು ಯಜುವೇಂದ್ರ ಚಾಹಲ್ ಹಾಗೂ ಶಹಬಾಜ್ ಅಹ್ಮದ್ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದರು.
ಸವಾಲಿನ ಮೊತ್ತ ಬೆನ್ನತ್ತಿದ ಆರ್ಸಿಬಿಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್ಗೆ 5.2 ಓವರ್ಗಳಲ್ಲಿ 48 ರನ್ಗಳ ಜೊತೆಯಾಟ ನೀಡಿದರು. ಈ ವೇಳೆ ಪಡಿಕ್ಕಲ್ (22) ವಿಕೆಟ್ ನಷ್ಟವಾಯಿತು.