ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೋಲ್ಕತ್ತ ನೈಟ್ ರೈಡರ್ಸ್ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಈ ಮೂಲಕ ಕಳೆದ ವರ್ಷ ಯುಎಇನಲ್ಲಿ ನಡೆದ ಐಪಿಎಲ್ ಫೈನಲ್ನಲ್ಲಿ ಎದುರಾದ ಸೋಲಿಗೆ ಸೇಡು ತೀರಿಸಿಕೊಂಡಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ, ಮಹೇಂದ್ರ ಸಿಂಗ್ ಧೋನಿ ಸಮಯೋಚಿತ ಅರ್ಧಶತಕದ (50*) ನೆರವಿನಿಂದ ಐದು ವಿಕೆಟ್ ನಷ್ಟಕ್ಕೆ 131 ರನ್ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು.
ಬಳಿಕ ಗುರಿ ಬೆನ್ನತ್ತಿದ ಕೆಕೆಆರ್, ಅಜಿಂಕ್ಯ ರಹಾನೆ (44) ಹಾಗೂ ಸ್ಯಾಮ್ಸ್ ಬಿಲ್ಲಿಂಗ್ಸ್ (25) ಆಕರ್ಷಕ ಬ್ಯಾಟಿಂಗ್ ನೆರವಿನಿಂದ 18.3 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
10 ಓವರ್ ಅಂತ್ಯಕ್ಕೆ ಕೆಕೆಆರ್ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿದೆ. ವೆಂಕಟೇಶ್ ಅಯ್ಯರ್ (16) ಹಾಗೂ ನಿತೀಶ್ ರಾಣಾ (21) ವಿಕೆಟ್ ಕಬಳಿಸಿರುವ ಡ್ವೇನ್ ಬ್ರಾವೊ ತಿರುಗೇಟು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
132 ರನ್ಗಳ ಗುರಿ ಬೆನ್ನತ್ತಿದ ಕೆಕೆಆರ್ ಉತ್ತಮ ಆರಂಭ ಪಡೆದಿದ್ದು, ಪವರ್ ಪ್ಲೇ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 43 ರನ್ ಗಳಿಸಿದೆ.
ಐಪಿಎಲ್ನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಅರ್ಧಶತಕದ (50*) ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು, ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ನಿಗದಿತ 20 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 131 ರನ್ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಆಹ್ವಾನಿಸಲ್ಪಟ್ಟ ಚೆನ್ನೈ ತಂಡದ ಆರಂಭ ಉತ್ತಮವಾಗಿರಲಿಲ್ಲ. 28 ರನ್ ಗಳಿಸುವಷ್ಟರಲ್ಲಿ ಆರಂಭಿಕರಾದ ಋತುರಾಜ್ ಗಾಯಕವಾಡ್ (0) ಹಾಗೂ ಡೆವೊನ್ ಕಾನ್ವೆ (3) ವಿಕೆಟ್ಗಳನ್ನು ಕಳೆದುಕೊಂಡಿತು. ಇವರಿಬ್ಬರನ್ನು ಹೊರದಬ್ಬಿದ ಉಮೇಶ್ ಯಾದವ್ ನಿಖರ ದಾಳಿ ಸಂಘಟಿಸಿದರು.
ರಾಬಿನ್ ಉತ್ತಪ್ಪ (28) ಹಾಗೂ ಅಂಬಡಿ ರಾಯುಡು (15) ಉತ್ತಮ ಆರಂಭ ಪಡೆದರೂ ಗರಿಷ್ಠ ಪ್ರಯೋಜನ ಪಡೆಯಲು ಸಾಧ್ಯವಾಗಲಿಲ್ಲ. ಶಿವಂ ದುಬೆ (3) ಕೂಡ ನಿರಾಸೆ ಮೂಡಿಸಿದರು. ಪರಿಣಾಮ 10.5 ಓವರ್ಗಳಲ್ಲಿ 61 ರನ್ನಿಗೆ ಐದು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೊಳಗಾಯಿತು.
ಈ ಹಂತದಲ್ಲಿ ಜೊತೆಗೂಡಿದ ನಾಯಕ ರವೀಂದ್ರ ಜಡೇಜ ಹಾಗೂ ಮಹೇಂದ್ರ ಸಿಂಗ್ ಧೋನಿ ಮುರಿಯದ ಆರನೇ ವಿಕೆಟ್ಗೆ 70 ರನ್ಗಳ ಅಮೂಲ್ಯ ಜೊತೆಯಾಟ ಕಟ್ಟಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು.
ಆರಂಭದಲ್ಲಿ ನಿಧಾನವಾಗಿ ಆಡಿದ ಧೋನಿ, ಬಳಿಕ ತಮ್ಮ ನೈಜ ಆಟವನ್ನು ಪ್ರದರ್ಶಿಸಿದರು. ಅಲ್ಲದೆ ಇನ್ನಿಂಗ್ಸ್ನ ಅಂತಿಮ ಓವರ್ನಲ್ಲಿ ಅರ್ಧಶತಕ ಗಳಿಸಿದರು.
ಅಲ್ಲದೆ ಐಪಿಎಲ್ 15ನೇ ಆವೃತ್ತಿಯಲ್ಲಿ ಅರ್ಧಶತಕ ಗಳಿಸಿದ ಮೊದಲ ಬ್ಯಾಟರ್ ಎನಿಸಿದರು. 38 ಎಸೆತಗಳನ್ನು ಎದುರಿಸಿದ ಧೋನಿ ಇನ್ನಿಂಗ್ಸ್ನಲ್ಲಿ ಏಳು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು.
ಅವರಿಗೆ ತಕ್ಕ ಸಾಥ್ ನೀಡಿದ ಜಡೇಜ 28 ಎಸೆತಗಳಲ್ಲಿ ಒಂದು ಸಿಕ್ಸರ್ ನೆರವಿನಿಂದ 26 ರನ್ ಗಳಿಸಿ ಔಟಾಗದೆ ಉಳಿದರು. ಕೆಕೆಆರ್ ಪರ ಉಮೇಶ್ ಯಾದವ್ ಎರಡು ಮತ್ತು ವರುಣ್ ಚಕ್ರವರ್ತಿ ಹಾಗೂ ಆ್ಯಂಡ್ರೆ ರಸೆಲ್ ತಲಾ ಒಂದು ವಿಕೆಟ್ ಪಡೆದರು.