ನವದೆಹಲಿ: ‘ಶ್ರೇಯಸ್ ಅಯ್ಯರ್ ಅವರು ವೆಸ್ಟ್ ಇಂಡೀಸ್ ಎದುರಿನ ಏಕದಿನ ಕ್ರಿಕೆಟ್ ಸರಣಿಯಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದು ಉತ್ತಮ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.
‘ಶಿಖರ್ ಧವನ್ ಅವರು ಗಾಯದಿಂದ ಚೇತರಿಸಿಕೊಳ್ಳದ ಕಾರಣ ಟ್ವೆಂಟಿ–20 ಸರಣಿಯಲ್ಲಿ ಇನಿಂಗ್ಸ್ ಆರಂಭಿಸುವ ಅವಕಾಶ ಕೆ.ಎಲ್.ರಾಹುಲ್ಗೆ ಸಿಕ್ಕಿತ್ತು. ಶ್ರೇಯಸ್ ಪ್ರತಿಭಾನ್ವಿತ ಆಟಗಾರ. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಅವರಿಗೆ ಅವಕಾಶ ನೀಡಬೇಕು’ ಎಂದಿದ್ದಾರೆ.
‘ವೆಸ್ಟ್ ಇಂಡೀಸ್ ತಂಡದಲ್ಲಿ ದೊಡ್ಡ ಹೊಡೆತಗಳನ್ನು ಬಾರಿಸುವ ಆಟಗಾರರು ಹೆಚ್ಚಿದ್ದಾರೆ. ಅವರಿಗೆ ಬೌಲಿಂಗ್ ಮಾಡುವುದು ನಿಜಕ್ಕೂ ಸವಾಲಿನ ಕೆಲಸ. ಈ ಸವಾಲನ್ನು ಮೀರಿ ನಿಲ್ಲಲು ನಮ್ಮವರು ಶಕ್ತಿಮೀರಿ ಪ್ರಯತ್ನಿಸಬೇಕು’ ಎಂದು ಹೇಳಿದ್ದಾರೆ.