ಕರಾಚಿ: ಭಾರತದ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ಆಡುವ ಕುರಿತು ನಿರ್ಧರಿಸಲು ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನೇತೃತ್ವದಲ್ಲಿ ಉನ್ನತಮಟ್ಟದ ಸಮಿತಿಯನ್ನು ಪ್ರಧಾನಿ ಶಹಬಾಜ್ ಷರೀಫ್ ರಚಿಸಿದ್ದಾರೆ.
ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ನಡೆಯಲಿರುವ ಕ್ರಿಕೆಟ್ ಟೂರ್ನಿಗಾಗಿ ಭಾರತಕ್ಕೆ ಪ್ರಯಾಣಿಸಲು ಅಧಿಕೃತ ಅನುಮತಿ ಕೋರಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ), ಪ್ರಧಾನಿಗೆ ಪತ್ರ ಬರೆದಿತ್ತು. ಅದರ ಬೆನ್ನಲ್ಲೇ ತಂಡವನ್ನು ಭಾರತಕ್ಕೆ ಕಳುಹಿಸಲು ಇರುವ ಸಾಧಕ– ಬಾಧಕ ಕುರಿತು ವರದಿ ನೀಡಲು ಸಮಿತಿಯನ್ನು ರಚನೆ ಮಾಡಿದೆ.
ಸಮಿತಿಯಲ್ಲಿ ಕ್ರೀಡಾ ಸಚಿವ ಎಹ್ಸಾನ್ ಮಜಾರಿ, ಮರ್ಯಮ್ ಔರಂಗಜೇಬ್, ಅಸದ್ ಮೆಹಮೂದ್, ಅಮೀನ್ ಉಲ್ ಹಕ್, ಕಮರ್ ಜಮಾನ್ ಕೈರಾ ಮತ್ತು ಮಾಜಿ ರಾಜತಾಂತ್ರಿಕ ತಾರಿಕ್ ಫಾತ್ಮಿ ಇದ್ದಾರೆ.
ಮತ್ತೊಂದೆಡೆ ಪಿಸಿಬಿಯ ಹಂಗಾಮಿ ಅಧ್ಯಕ್ಷ ಝಾಕಾ ಅಶ್ರಫ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ತಸೀರ್ ಐಸಿಸಿ ಸಭೆಗಳಲ್ಲಿ ಪಾಲ್ಗೊಳ್ಳಲು ಶನಿವಾರ ರಾತ್ರಿ ಡರ್ಬನ್ಗೆ ತೆರಳಲಿದ್ದಾರೆ. ಭಾರತವು ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಪದೇ ಪದೇ ನಿರಾಕರಿಸುತ್ತಿರುವ ಬಗ್ಗೆ ಅವರು ಸಭೆಯಲ್ಲಿ ಉಲ್ಲೇಖಿಸುವ ಸಾಧ್ಯತೆ ಇದೆ.
ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅ.15 ರಂದು ಅಹಮದಾಬಾದ್ನಲ್ಲಿ ನಡೆಯಲಿದೆ.