ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಅವರು ಇಂದು (ಮಂಗಳವಾರ) ಅರ್ಜುನ ಪ್ರಶಸ್ತಿ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಅರ್ಜುನ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಕ್ಷಣ ಎಂದು ಮೊಹಮ್ಮದ್ ಶಮಿ ಪ್ರತಿಕ್ರಿಯಿಸಿದ್ದಾರೆ.
'ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರತಿಷ್ಠಿತ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಅತೀವ ಹೆಮ್ಮೆ ಅನಿಸುತ್ತದೆ. ನಾನು ಈ ಹಂತಕ್ಕೆ ತಲುಪಲು ಸಹಾಯ ಮಾಡಿದ ಮತ್ತು ನನ್ನ ಏರಿಳಿತಗಳಲ್ಲಿ ಸದಾ ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನನ್ನ ಕೋಚ್, ಬಿಸಿಸಿಐ, ತಂಡದ ಸಹ ಆಟಗಾರರು, ನನ್ನ ಕುಟುಂಬ, ಸಹಾಯಕ ಸಿಬ್ಬಂದಿ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳು. ನನ್ನ ಪರಿಶ್ರಮವನ್ನು ಗುರುತಿಸಿದ್ದಕ್ಕೆ ಧನ್ಯವಾದಗಳು. ನನ್ನ ದೇಶವನ್ನು ಹೆಮ್ಮೆಪಡುವಂತೆ ಮಾಡಲು ನನ್ನ ಶ್ರೇಷ್ಠ ಪ್ರದರ್ಶನವನ್ನೇ ನೀಡಲು ಸದಾ ಪ್ರಯತ್ನಿಸುತ್ತೇನೆ. ಮಗದೊಮ್ಮೆ ಎಲ್ಲರಿಗೂ ಧನ್ಯವಾದಗಳು. ಅರ್ಜುನ ಪ್ರಶಸ್ತಿ ವಿಜೇತರಿಗೆಲ್ಲ ಅಭಿನಂದನೆಗಳು' ಎಂದು ಮೊಹಮ್ಮದ್ ಶಮಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
Today I am feeling very proud that I have been honored with the prestigious Arjuna Award by the President. I want to thank all those people who have helped me a lot to reach here and have always supported me in my ups and downs... thanks to My Coach, BCCI,team mates,my family,… pic.twitter.com/fWLGKfY5g8
— 𝕸𝖔𝖍𝖆𝖒𝖒𝖆𝖉 𝖘𝖍𝖆𝖒𝖎 (@MdShami11) January 9, 2024
ಭಾರತೀಯ ಕ್ರಿಕೆಟ್ಗೆ ಶಮಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಅರ್ಜುನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು. ತಮ್ಮ ವೃತ್ತಿ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಕಂಡಿರುವ ಶಮಿ, ಕಳೆದ ವರ್ಷಾಂತ್ಯದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅಮೋಘ ಬೌಲಿಂಗ್ ಮಾಡಿದ್ದರು. ಒಟ್ಟು 24 ವಿಕೆಟ್ ಗಳಿಸಿದ್ದ ಶಮಿ ಭಾರತ ತಂಡ ಫೈನಲ್ ತಲುಪಲು ಪ್ರಮುಖ ಪಾತ್ರ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.