ಭಾನುವಾರ ತಿರುವನಂತಪುರದಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಮತ್ತು ಸಹಾಯಕ ಸಿಬ್ಬಂದಿ ಇಂದು ಸಂಜೆ ಕೋಲ್ಕತ್ತದಿಂದ ತೆರಳಲಿದೆ. ಇದಕ್ಕೂ ಮುನ್ನವೇ ದ್ರಾವಿಡ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ, ಬೆಳಗಿನ ಜಾವದ ವಿಮಾನದಲ್ಲಿ ಕೋಲ್ಕತ್ತದಿಂದ ಬೆಂಗಳೂರಿಗೆ ತೆರಳಿದ್ದಾರೆ. 2ನೇ ಏಕದಿನ ಪಂದ್ಯದ ವೇಳೆ ದ್ರಾವಿಡ್ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದ್ದು, ಬೆಂಗಾಲ್ ಕ್ರಿಕೆಟ್ ಮಂಡಳಿಯ ವೈದ್ಯರು ತಪಾಸಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ದ್ರಾವಿಡ್ ವಿಮಾನದಲ್ಲಿ ಕುಳಿತಿರುವ ಮತ್ತು ವಿಮಾನ ನಿಲ್ದಾಣದಲ್ಲಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.