ನವದೆಹಲಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಟೀಮ್ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಡೆಹ್ರಾಡೂನ್ ಆಸ್ಪತ್ರೆಯಿಂದ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮೂಲಗಳು ತಿಳಿಸಿವೆ.
ಪಂತ್ ಅವರು ಮುಂಬೈಯಲ್ಲಿ ಮೊಣಕಾಲು ಮತ್ತು ಬಲಗಾಲಿನ ಮಂಡಿಯ ಲಿಗಮೆಂಟ್ (ಅಸ್ಥಿರಜ್ಜು) ಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಸಲಹೆಗಾರ ಮತ್ತು ಹಿರಿಯ ಮೂಳೆ ಶಸ್ತ್ರಚಿಕಿತ್ಸಕ ಡಾ.ದಿನ್ಶಾ ಪರ್ದಿವಾಲಾ ತಿಳಿಸಿದ್ದಾರೆ.
ಶಸ್ತ್ರಚಿಕಿತ್ಸೆಯ ಅಗತ್ಯತೆ ಕಂಡುಬಂದರೆ ಬ್ರಿಟನ್ ಅಥವಾ ಅಮೆರಿಕದಲ್ಲಿರುವ ತಜ್ಞರ ಸಲಹೆಯನ್ನು ಪಡೆಯಲಾಗುವುದು ಎಂದು ಪರ್ದಿವಾಲಾ ಹೇಳಿದ್ದಾರೆ.
2022 ಡಿಸೆಂಬರ್ 30ರಂದು ಬೆಳಿಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ 25 ವರ್ಷದ ಪಂತ್ ಗಾಯಗೊಂಡಿದ್ದರು. ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿತ್ತು. ಅದೃಷ್ಟವಶಾತ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು.
ತಲೆ, ಬೆನ್ನು, ಮಂಡಿ, ಕಾಲಿಗೆ ಗಾಯಗಳಾಗಿದ್ದವು. ಅಪಘಾತದಲ್ಲಿ ಕಾರು ಸುಟ್ಟು ಹೋಗಿದ್ದರೂ, ಪಂತ್ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದರು.
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕ್ರಿಕೆಟಿಗ ರಿಷಭ್ ಪಂತ್ ಅವರ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದರು.