ನವದೆಹಲಿ: ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆ ಹಿನ್ನೆಲೆಯಲ್ಲಿ ಮಾತನಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು, 'ಎಲ್ಲ ಸಮಯದಲ್ಲೂ ಮಾಸ್ಕ್ ಧರಿಸಿಕೊಂಡು ಇರಲು ವಾಸ್ತವದಲ್ಲಿ ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡದ ಎಡಗೈ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೋವಿಡ್–19ರ ಡೆಲ್ಟಾ ರೂಪಾಂತರ ತಳಿಯು ಪಂತ್ಗೆ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ರಿಷಭ್ ಪಂತ್ ಅವರು ಕಳೆದ ಕೆಲ ದಿನಗಳಿಂದ ಪ್ರತ್ಯೇಕವಾಸದಲ್ಲಿದ್ದು, ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಅವರು ಟೀಮ್ ಇಂಡಿಯಾ ಜೊತೆ ಡರ್ಹ್ಯಾಮ್ಗೆ ಪ್ರಯಾಣಿಸುತ್ತಿಲ್ಲ ಎಂದು ಬಿಸಿಸಿಐ ತಿಳಿಸಿದೆ.