ಬೆಂಗಳೂರು: ದಕ್ಷಿಣ ಕನ್ನಡದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿ ಸಾರ್ವಜನಿಕರ ಆಸ್ತಿ–ಪಾಸ್ತಿಗೆ ಹಾನಿಯಾಗಿದ್ದು, ಪರಿಹಾರ ಕಾರ್ಯಕ್ಕೆ ತಕ್ಷಣವೇ ₹ 20 ಕೋಟಿ ಬಿಡುಗಡೆ ಮಾಡಬೇಕು ಎಂದು ಶಾಸಕ ಯು.ಟಿ.ಖಾದರ್ ಮನವಿ ಮಾಡಿದರು.
ಜಿಲ್ಲೆಯಲ್ಲಿ ರಸ್ತೆಗಳು, ಸೇತುವೆಗಳು ಮತ್ತು ಕಟ್ಟಡಗಳಿಗೆ ಹಾನಿ ಉಂಟಾಗಿದೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಮೃತಪಟ್ಟವರಿಗೆ ಜಿಲ್ಲಾ ಆಡಳಿತದ ವತಿಯಿಂದ ತಲಾ ₹ 5 ಲಕ್ಷ ಪರಿಹಾರ ನೀಡಲಾಗಿದೆ. ಮನೆ ಹಾನಿಗೆ ₹ 1.90 ಲಕ್ಷ ಮತ್ತು ಭಾಗಶಃ ಹಾನಿಯಾದ ಮನೆಗಳಿಗೆ ₹ 52 ಸಾವಿರ ಪರಿಹಾರವನ್ನು ಹತ್ತು ದಿನಗಳಲ್ಲಿ ನೀಡಲಾಗುವುದು ಎಂದರು ಹೇಳಿದರು.
ಕುಂದಾಪುರ– ತಲಪಾಡಿ ಹೆದ್ದಾರಿ ಪೂರ್ಣಗೊಳ್ಳದೇ ಇರುವುದರಿಂದಅಲ್ಲಿ ನೀರು ತುಂಬಿಕೊಂಡು ರಸ್ತೆ ಸಂಚಾರಕ್ಕೆ ತೊಂದರೆ ಆಗಿದೆ. ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದೇ ಇದಕ್ಕೆ ಕಾರಣ. ರಸ್ತೆ ಕಾಮಗಾರಿ ತ್ವರಿತಗೊಳಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಖಾದರ್ ಹೇಳಿದರು.
ಪ್ರವಾಹ ಸಂತ್ರಸ್ತ ಪ್ರದೇಶದ ವೀಕ್ಷಣೆಗೆ ದಕ್ಷಿಣಕನ್ನಡಕ್ಕೆ ಬಂದಿದ್ದ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಪ್ರವಾಹದ ವಿಷಯದಲ್ಲೂ ರಾಜಕೀಯಕರಣ ಮಾಡಿದ್ದಾರೆ ಎಂದು ಅವರು ಟೀಕಿಸಿದರು.