ಬ್ರೆಡಾ, ನೆದರ್ಲ್ಯಾಂಡ್ಸ್: ಭಾರತ ತಂಡದವರು ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿಯ ಮೇಲೆ ಕಣ್ಣಿಟ್ಟಿದ್ದಾರೆ. ಶನಿವಾರ ನಡೆಯುವ ತನ್ನ ಮೊದಲ ಹಣಾಹಣಿಯಲ್ಲಿ ಪಿ.ಆರ್.ಶ್ರೀಜೇಶ್ ಬಳಗ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ಎದುರು ಸೆಣಸಲಿದೆ.
2016ರಲ್ಲಿ ಲಂಡನ್ನಲ್ಲಿ ನಡೆದಿದ್ದ ಟೂರ್ನಿಯಲ್ಲಿ ಭಾರತ ರನ್ನರ್ಸ್ ಅಪ್ ಆಗಿತ್ತು. ಟೂರ್ನಿಯ ಫೈನಲ್ನಲ್ಲಿ ಆಸ್ಟ್ರೇಲಿಯಾ ಎದುರು ಪರಾಭವಗೊಂಡಿತ್ತು.
ಗೋಲ್ಡ್ ಕೋಸ್ಟ್ನಲ್ಲಿ ನಡೆದಿದ್ದ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ಭಾರತ, ಚಾಂಪಿಯನ್ಸ್ ಟ್ರೋಫಿಗಾಗಿ ಬೆಂಗಳೂರಿನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ವಿಶೇಷ ತರಬೇತಿ ಪಡೆದಿತ್ತು. ಕೋಚ್ ಹರೇಂದರ್ ಸಿಂಗ್ ಅವರು ಹಲವು ಕೌಶಲಗಳನ್ನು ಹೇಳಿಕೊಟ್ಟಿದ್ದರು.
ವಿಶ್ವ ರ್ಯಾಂಕಿಂಗ್ನಲ್ಲಿ ಆರನೇ ಸ್ಥಾನ ಹೊಂದಿರುವ ಶ್ರೀಜೇಶ್ ಬಳಗ 13ನೇ ಸ್ಥಾನದಲ್ಲಿರುವ ಪಾಕಿಸ್ತಾನವನ್ನು ಸುಲಭವಾಗಿ ಮಣಿಸುವ ವಿಶ್ವಾಸ ಹೊಂದಿದೆ.
2016ರ ಏಷ್ಯಾ ಚಾಂಪಿಯನ್ಸ್ ಟ್ರೋಫಿ, 2017ರಲ್ಲಿ ನಡೆದಿದ್ದ ಹಾಕಿ ವಿಶ್ವ ಲೀಗ್ ಸೆಮಿಫೈನಲ್ ಮತ್ತು ಬಾಂಗ್ಲಾದೇಶದಲ್ಲಿ ಜರುಗಿದ್ದ ಏಷ್ಯಾಕಪ್ ಟೂರ್ನಿಗಳಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿತ್ತು. ಇದು ಆಟಗಾರರ ಮನೋಬಲ ಹೆಚ್ಚುವಂತೆ ಮಾಡಿದೆ.
ಕರ್ನಾಟಕದ ಎಸ್.ವಿ.ಸುನಿಲ್ ಮತ್ತು ಅನುಭವಿ ಆಟಗಾರ ಸರ್ದಾರ್ ಸಿಂಗ್ ಅವರು ಭಾರತ ತಂಡದ ಆಧಾರಸ್ತಂಭಗಳಾಗಿದ್ದಾರೆ.