ಬೆಂಗಳೂರು: ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡಗಳ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಸ್ಥಗಿತಗೊಳಿಸಿ ಯಥಾಸ್ಥಿತಿ ಕಾಪಾಡುವ ಆದೇಶವನ್ನು ಇದೇ 9ರವರೆಗೆ ಹೈಕೋರ್ಟ್ ಮುಂದುವರಿಸಿದೆ.
ಈ ಕುರಿತಂತೆ ಮೈಕಾನ್ ಕನ್ಸ್ಟ್ರಕ್ಷನ್ ಕಂಪನಿ ನಿರ್ದೇಶಕ ಸುದರ್ಶನ್ ಮಾಲ್ಪಾನಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (ಕ್ರೈಸ್) ವಿವಿಧ ಕಾಮಗಾರಿಗಳಿಗೆ ಕರೆದಿರುವ ₹ 800 ಕೋಟಿ ಮೊತ್ತದ ಟೆಂಡರ್ ಅನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.
‘ಪ್ರತಿವಾದಿಗಳಲ್ಲಿ ಕೆಲವರಿಗೆ ಇನ್ನೂ ನೋಟಿಸ್ ತಲುಪಿಲ್ಲ’ ಎಂಬ ಕಾರಣಕ್ಕೆ ವಿಚಾರಣೆಯನ್ನು ಇದೇ 9ಕ್ಕೆ ಮುಂದೂಡಲಾಗಿದೆ.