ಬೆಂಗಳೂರು: ‘ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆ ವಿಚಾರಕ್ಕೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ರಚಿಸಲಾಗಿರುವ ತಜ್ಞರ ಸಮಿತಿಗೆ ಯಾವುದೇ ಚಟುವಟಿಕೆ ನಡೆಸದಂತೆ ಪ್ರತಿಬಂಧಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಎಲ್ಐ) ಸಲ್ಲಿಸಲಾಗಿದೆ.
ಈ ಕುರಿತಂತೆ ಹೈಕೋರ್ಟ್ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ಇದೇ 9ಕ್ಕೆ ವಿಚಾರಣೆ ನಡೆಸಲಾಗುತ್ತಿದೆ. ಆಗಲೇ ಈ ಅರ್ಜಿಯನ್ನೂ ವಿಚಾರಣೆ ನಡೆಸಲಾಗುವುದು’ ಎಂದು ನ್ಯಾಯಪೀಠ ಹೇಳಿತು.
‘ಸರ್ಕಾರ ತಜ್ಞರ ಸಮಿತಿ ನೇಮಿಸಿರುವುದು ಸಂವಿಧಾನದ ಅನುಸಾರ ವ್ಯಕ್ತಿಯೊಬ್ಬನ ಧಾರ್ಮಿಕ ಆಚರಣೆ ಸ್ವಾತಂತ್ರ್ಯಕ್ಕೆ ವ್ಯತಿರಿಕ್ತವಾಗಿದೆ. ವೀರಶೈವ ಮತ್ತು ಲಿಂಗಾಯತ ಧರ್ಮ ಅನುಯಾಯಿಗಳ ಭಾವನೆಗೆ ಧಕ್ಕೆ ತರುವಂತಿದೆ’ ಎಂಬುದು ಅರ್ಜಿದಾರರ ಆಕ್ಷೇಪ. ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಪಿ.ಶಂಕರ್ ಹಾಜರಾಗಿದ್ದರು.