ದೇವನಹಳ್ಳಿ: ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಕಟ್ಟಿ ಬೆಳೆಸಿ ರಾಜ್ಯದಲ್ಲಿ ಈ ಮಟ್ಟಕ್ಕೆ ತಂದು ನಿಲ್ಲಿಸಿರುವ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಪಕ್ಷದಲ್ಲಿ ಪ್ರಶ್ನಾತೀತ ನಾಯಕ ಎಂದು ಜಿಲ್ಲಾ ಬಿಜೆಪಿ ಘಟಕ ಉಪಾಧ್ಯಕ್ಷ ಎಚ್.ಎಂ.ರವಿಕುಮಾರ್ ತಿಳಿಸಿದರು.
ಇಲ್ಲಿನ ಕೊಯಿರಾ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಯಡಿಯೂರಪ್ಪ ಅವರ 75ನೇ ಜನ್ಮ ದಿನಾಚರಣೆ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಿಸಿದ ನಂತರ ಅವರು ಮಾತನಾಡಿದರು.
ಅಡಳಿತ ಪಕ್ಷಗಳ ವಿರುದ್ಧ ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಜಾಥಾ ಮೂಲಕ ನಾಡಿನ ಜನರ ಗಮನ ಸೆಳೆದು, ಅನೇಕ ಬಾರಿ ಜೈಲುವಾಸಕ್ಕೆ ಗುರಿಯಾಗಿದ್ದಾರೆ. ಅಂತಹ ಪ್ರಭಾವಿ ನಾಯಕಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಬೇಕಿದೆ ಎಂದರು.
ಬಿಜೆಪಿ ಜಿಲ್ಲಾ ಘಟಕ ಕಾರ್ಯದರ್ಶಿ ಕೆ.ಎನ್.ರಮೇಶ್ ಬಾಬು ಮಾತನಾಡಿ, ಯಡಿಯೂರಪ್ಪ ಅವರ ದೃಢಹೆಜ್ಜೆ ಮತ್ತು ದೂರದೃಷ್ಟಿ ಚಿಂತನೆ ಯುವ ಸಮುದಾಯಕ್ಕೆ ಮಾದರಿ ಎಂದರು.
ಬಿಜೆಪಿ ತಾಲ್ಲೂಕು ಘಟಕ ಉಪಾಧ್ಯಕ್ಷ ಕೆ.ಸಿ.ಮುನಿರಾಜು, ತಾಲ್ಲೂಕು ಯುವ ಮೋರ್ಚಾ ಉಪಾಧ್ಯಕ್ಷ ಹರ್ಷವರ್ಧನ್, ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗೌಡ, ಮುಖಂಡ ಉತ್ತನ್ನಳಪ್ಪ ಹಾಗೂ ಮುಖಂಡರು ಇದ್ದರು.