ಬೆಂಗಳೂರು: ‘ವಿಧಾನಸಭೆ ಕಾರ್ಯದರ್ಶಿ ಹುದ್ದೆಯಿಂದ ನನ್ನನ್ನು ಅಮಾನತುಗೊಳಿಸಿ ವಿಧಾನಸಭೆ ವಿಶೇಷ ಮಂಡಳಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಎಸ್.ಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಆರ್.ದೇವದಾಸ್ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಎಸ್.ಮೂರ್ತಿ ಸಲ್ಲಿಸಿರುವ ಅರ್ಜಿಯು ಸೋಮವಾರ ಹೈಕೋರ್ಟ್ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ನ್ಯಾಯಮೂರ್ತಿಗಳು, ಅರ್ಜಿದಾರರು ನನಗೆ ಪರಿಚಯ ಇದ್ದಾರೆ’ ಎಂಬ ಕಾರಣಕ್ಕೆ ವಿಚಾರಣೆಯಿಂದ ಹಿಂದೆ ಸರಿದರು.
ವಿಧಾನಸಭೆ ಕಾರ್ಯದರ್ಶಿಯಾಗಿದ್ದ ಎಸ್. ಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಿ ವಿಧಾನಸಭೆ ಅಧೀನ ಕಾರ್ಯದರ್ಶಿ 2018ರ ಡಿಸೆಂಬರ್ 27ರಂದು ಆದೇಶ ಹೊರಡಿಸಿದ್ದರು. ‘2016 ಹಾಗೂ 2017ನೇ ಸಾಲಿನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಕಾಮಗಾರಿ ಹಾಗೂ ಇತರೆ ಖರ್ಚು ವೆಚ್ಚಗಳಲ್ಲಿ ಅವ್ಯವಹಾರ ನಡೆಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿರುವ ಶಾಸಕಾಂಗದ ವಿಶೇಷ ಮಂಡಳಿಯ ಆದೇಶದ ಅನುಸಾರ ಎಸ್. ಡಮೂರ್ತಿಯವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿತ್ತು.