ಚಿಕ್ಕಮಗಳೂರು: ಎಲ್ಲ ಮತದಾರರು ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕು ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಸಲಹೆ ಮಾಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ, ತಾಲ್ಲೂಕು ಘಟಕದ ವತಿಯಿಂದ ನಗರದ ಶಂಕರಮಠದಲ್ಲಿ ಶನಿವಾರ ಏರ್ಪಡಿಸಿದ್ದ ‘ಮತದಾನ ಜಾಗೃತಿ ಹಾಗೂ ಪತ್ರಿಕೋದ್ಯಮ’ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ದೇವ ಪೂಜೆಗಿಂತ ದೇಶಪೂಜೆ ದೊಡ್ಡದು, ದೇಶ ಉಳಿದರೆ ಪ್ರಜಾಪ್ರಭುತ್ವ ವ್ಯವಸ್ಥೆ, ಪರಂಪರೆ ಉಳಿಯುತ್ತದೆ. ಮತ ಎಂದರೆ ಅಭಿಪ್ರಾಯ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕು ಎಂದರು.
ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು. ದೇಶಕ್ಕೆ ನೀಡುವ ಅಮೂಲ್ಯ ದಾನವೆಂದರೆ ಅದು ಮತದಾನ ಎಂದರು.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾತನಾಡಿ, ಮತದಾನ ಮಾಡುವುದರ ಜೊತೆಗೆ ಉಳಿದವರಿಗೂ ಮತ ಹಾಕಲು ಪ್ರೇರೇಪಿಸಬೇಕು ಎಂದು ಮನವಿ ಮಾಡಿದರು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಮಂಜುಳಾ ಹುಲ್ಲಹಳ್ಳಿ, ಪತ್ರಕರ್ತ ಸ.ಗಿರಿಜಾಶಂಕರ್ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಎ.ಮೊದಲಿಯಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ರಾಜೇಶ್, ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಪ್ರಕಾಶ್, ಸಂಘದ ಗೌರವಾಧ್ಯಕ್ಷ ರಮೇಶ್ ನಾರಿನಿಂಗಜ್ಜಿ ಇದ್ದರು.