ಕೊಪ್ಪಳ: 2019ರ ಲೋಕಸಭಾ ಚುನಾವಣಾ ನಿಮಿತ್ತ ಬಿಜೆಪಿ ಬಿಡುಗಡೆಗೊಳಿಸಿದ ಪ್ರಣಾಳಿಕೆಯೂ ದೇಶದ ಭವಿಷ್ಯ ಬರೆಯುವ ಪ್ರಣಾಳಿಕೆ ಆಗಿದೆ ಎಂದು ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಲೋಕಸಭಾ ಚುನಾವಣೆಯ ನಿಮಿತ್ತ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದ ಪ್ರಯುಕ್ತ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಬಾಕಿ ಇರುವ ಎಲ್ಲ ನೀರಾವರಿ ಯೋಜನೆಗಳನ್ನು 5 ವರ್ಷಗಳಲ್ಲಿ ಪೂರ್ಣಗೊಳಿಸುವ ಮಹತ್ವದ ನಿರ್ಧಾರವನ್ನು ಈ ಬಾರಿಯ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಇದರಿಂದ ನಮ್ಮ ಭಾಗದಲ್ಲಿ ಅರ್ಧಕ್ಕೆ ನಿಂತ ಕೊಪ್ಪಳ ಏತ ನೀರಾವರಿ ಯೋಜನೆ ಹಾಗೂ ಸಿಂಗಟಾಲೂರು ಏತ ನೀರಾವರಿ ಯೋಜನೆಗಳು ಪೂರ್ಣಗೊಂಡು ಈ ಭಾಗದ ರೈತರಿಗೆ ಅನುಕೂಲ ಆಗಲಿದೆ ಎಂದರು.
ಅಲ್ಲದೇ ಗ್ರಾಮೀಣ ಭಾಗದ ಅಭಿವೃದ್ಧಿಗೆ₹ 25 ಲಕ್ಷ ಕೋಟಿ ಅನುದಾನವನ್ನು ಮೀಸಲಿಡಲಾಗುತ್ತದೆ. 60 ವರ್ಷ ದಾಟಿದ ಸಣ್ಣ ಹಿಡುವಳಿ ರೈತರಿಗೆ ಮಾಸಿಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ರಾಷ್ಟ್ರದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಭವಿಷ್ಯದಲ್ಲಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗಲಾಗುತ್ತದೆ ಎಂದರು.
ಅಲ್ಲದೇ ಈ ಹಿಂದಿನ ಎಲ್ಲ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ ಹಿಂದಿನ ಎಲ್ಲ ಭರವಸೆಗಳನ್ನು ಈಡೇರಿಸಲಾಗುತ್ತದೆ ಎಂದು ಅವರು ಹೇಳಿದರು.
ಉದ್ಯೋಗ ಸೃಷ್ಟಿಯ ಬಗ್ಗೆ ಯಾವುದೇ ವಿಚಾರ ಪ್ರಸ್ತಾಪಿಸಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದುವರಿಯುತ್ತಿರುವ ತಂತ್ರಜ್ಞಾನ ಯುಗದಲ್ಲಿ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿಯೇ ಮುದ್ರಾ ಯೋಜನೆಯ ಅಡಿಯಲ್ಲಿ ಸ್ವ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ. ಅಲ್ಲದೇ ಕೌಶಲ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ. ಈ ಮೂಲಕ ಸ್ವಾವಲಂಬಿಗಳಾಗಬಹುದು ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ, ಲೋಕಸಭಾ ಚುನಾಣೆಯ ಜಿಲ್ಲಾ ಸಂಚಾಲಕ ಗಿರೀಗೌಡ, ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸಿ.ವಿ.ಚಂದ್ರಶೇಖರ್, ಯುವ ಮುಖಂಡ ಹಾಲೇಶ ಕಂದಾರಿ, ಒಬಿಸಿ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ, ಫಕೀರಸ್ವಾಮಿ ಇದ್ದರು.
*ಸ್ಥಳೀಯವಾಗಿ ಏತ ನೀರಾವರಿ ಯೋಜನೆಗಳ ಮುಂದುವರೆಸುತ್ತೇನೆ. ರೈಲ್ವೆ ಮಾರ್ಗಗಳನ್ನು ವಿಸ್ತರಣೆ ಮಾಡುತ್ತೇನೆ. ಅಲ್ಲದೇ ಜಿಲ್ಲೆಗೆ ಕೇಂದ್ರ ಕೃಷಿ ವಿದ್ಯಾಲಯವನ್ನು ತರುತ್ತೇನೆ. ಈ ಎಲ್ಲ ಭರವಸೆಗಳನ್ನು ಈಡೇರಿಸುತ್ತೇನೆ.