ಬೆಂಗಳೂರು: ಜಾರಿ ನಿರ್ದೇಶನಾಲಯದಿಂದ ದಾಳಿಗೆ ತುತ್ತಾದ ಮೆಸರ್ಸ್ ಇಂಡಿಯನ್ಸ್ ಫಾರ್ ಅಮ್ನೆಸ್ಟಿ ಇಂಟರ್ನ್ಯಾಷನಲ್ ಟ್ರಸ್ಟ್ ತನ್ನ ಸಿಬ್ಬಂದಿಯ ವೇತನಕ್ಕೆ ಹಣ ಬಳಸಲು ಹೈಕೋರ್ಟ್ ಅನುಮತಿ ನೀಡಿದೆ.
ಮ್ಯಾನೇಜಿಂಗ್ ಟ್ರಸ್ಟಿ ಆಕಾರ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಮಧ್ಯಂತರ ಆದೇಶ ನೀಡಿದೆ.
‘2018ರ ಅಕ್ಟೋಬರ್ 25ರಂದು ಜಾರಿ ನಿರ್ದೇಶನಾಲಯ ಟ್ರಸ್ಟ್ನ ಕಚೇರಿ ಮೇಲೆ ದಾಳಿ ನಡೆಸಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ತದನಂತರ ಖಾತೆಗೆ ಜಮೆ ಆಗಿರುವ ಹಣವನ್ನು ಸಿಬ್ಬಂದಿಯ ವೇತನಕ್ಕೆ ಬಳಸಿಕೊಳ್ಳಬಹುದು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದರು. ‘ವಿದೇಶದಿಂದ ಹಣ ಪಡೆದು ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಆರೋಪದ ಅಡಿಯಲ್ಲಿ ಇ.ಡಿ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.