ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ’ ಎಂದು ಆರೋಪಿಸಿರುವ ವೀರಶೈವ ಲಿಂಗಾಯತ ಯುವ ಬ್ರೀಗೆಡ್, ಇದರ ವಿರುದ್ಧ ಹೋರಾಟದ ಎಚ್ಚರಿಕೆ ನೀಡಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ರಿಗೇಡ್ನ ರಾಜ್ಯ ಘಟಕದ ಅಧ್ಯಕ್ಷ ಬಿ.ಆರ್. ಮಹೇಶ್, ‘ಯಡಿಯೂರಪ್ಪ ವಿರುದ್ಧ ಕೆಲ ನಾಯಕರು ಅನಗತ್ಯ ಹೇಳಿಕೆ ನೀಡುತ್ತಿದ್ದಾರೆ’ ಎಂದು ಟೀಕಿಸಿದರು.
ಅಲ್ಲದೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಮುಖ್ಯಮಂತ್ರಿ ಸ್ಥಾನಕ್ಕೆ ಅಗೌರವ ತೋರುತ್ತಿದ್ದಾರೆ. ಈ ವಿಚಾರವಾಗಿ ಕೇಂದ್ರದ ಮುಖಂಡರು ಮಧ್ಯ ಪ್ರವೇಶಿಸಿ, ಯಡಿಯೂರಪ್ಪ ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರ. ಅವರ ಕಾರ್ಯವೈಖರಿಯಿಂದಲೇ ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದಿದೆ. ಇದೇ ರೀತಿ ವೀರಶೈವ ಲಿಂಗಾಯತ ಸಮುದಾಯದ ನಾಯಕರನ್ನು ಕಡೆಗಣಿಸಿದರೆ ಭವಿಷ್ಯದಲ್ಲಿ ಪಕ್ಷಕ್ಕೆ ಭಾರಿ ಹೊಡೆತ ಬೀಳಲಿದೆ’ ಎಂದೂ ಎಚ್ಚರಿಸಿದರು.