ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ಅನುತ್ತೀರ್ಣರಾದವರೂ ಸಿಇಟಿ ಪರೀಕ್ಷೆಗೆ ಹಾಜರಾಗಲು ಯಾವುದೇ ಸಮಸ್ಯೆ ಇಲ್ಲ. ಧೈರ್ಯದಿಂದ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯಲು ಸಜ್ಜಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಧೈರ್ಯದ ಮಾತುಗಳನ್ನು ಹೇಳಿದ್ದಾರೆ.
ಅನುತ್ತೀರ್ಣರಾದವರು ಪೂರಕ ಪರೀಕ್ಷೆಯಲ್ಲಿ ಕುಳಿತು ಉತ್ತೀರ್ಣರಾಗಲು ಅವಕಾಶವಿದೆ. ಆದ್ದರಿಂದ ಸಿಇಟಿ ಹಾಜರಾಗಬೇಕು. ಕಡಿಮೆ ಅಂಕ ಬಂದವರು ಸಿಇಟಿಯಲ್ಲಿ ಉತ್ತಮ ಅಂಕಗಳನ್ನು ಪಡೆದು ಎಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ಗಳಲ್ಲಿ ಸೀಟು ಗಿಟ್ಟಿಸಬಹುದು ಎಂದು ತಿಳಿಸಿದ್ದಾರೆ.
ವೃತ್ತಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ರಾಜ್ಯದ 1.94 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ, ದ್ವಿತೀಯ ಪಿಯು ವಿಜ್ಞಾನದ ವಿದ್ಯಾರ್ಥಿಗಳು ಉತ್ತೀರ್ಣರಾಗಿರುವವರ ಸಂಖ್ಯೆ 1.44 ಲಕ್ಷ ಮಾತ್ರ.
ಸಿಇಟಿಗೆ ಅರ್ಜಿ ಸಲ್ಲಿಸಿರುವವರಲ್ಲಿ ಸುಮಾರು 50 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿರುವುದರಿಂದ ಅಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗುವ ಸಾಧ್ಯತೆ ಸಂಖ್ಯೆ ಕಡಿಮೆ ಎಂಬ ಆತಂಕ ವ್ಯಕ್ತವಾಗಿದೆ.