ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ತಂತ್ರಗಾರಿಕೆ ಹೆಣೆಯುತ್ತಿರುವ ಕಾಂಗ್ರೆಸ್, ಜಾತಿವಾರು ಕಾರ್ಯಾಧ್ಯಕ್ಷರನ್ನು ನೇಮಿಸಿ ಮತ ಸೆಳೆಯುವ ಲೆಕ್ಕಾಚಾರ ನಡೆಸಿದೆ.
ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ನೇಮಕ ಮಾಡಿದಾಗ ಅವರ ಜತೆಗೆ ವೀರಶೈವ–ಲಿಂಗಾಯತ ಸಮುದಾಯದ ಈಶ್ವರ ಖಂಡ್ರೆ ಅವನ್ನುಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಲೋಕಸಭೆ ಚುನಾವಣೆ ಹೊತ್ತಿನಲ್ಲಿರುವಾಗ ದಲಿತ ಎಡಗೈ, ಒಕ್ಕಲಿಗ ಹಾಗೂ ಮುಸ್ಲಿಂ ಸಮುದಾಯಕ್ಕೆ ತಲಾ ಒಂದೊಂದು ಪ್ರಾತಿನಿಧ್ಯ ನೀಡಿ, ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡುವ ಚಿಂತನೆ ವರಿಷ್ಠರದ್ದಾಗಿದೆ ಎಂದು ಮೂಲಗಳು ಹೇಳಿವೆ.
ದಲಿತ ಎಡಗೈ ಸಮುದಾಯದಿಂದ ಎಚ್. ಆಂಜನೇಯ, ಮುಸ್ಲಿಂ ಸಮುದಾಯದಿಂದ ತನ್ವೀರ್ ಸೇಠ್ ಅಥವಾ ಸಲೀಂ ಅಹಮದ್ ಹಾಗೂ ಒಕ್ಕಲಿಗ ಸಮುದಾಯದ ಬಿ.ಎಲ್. ಶಂಕರ್ ಅಥವಾ ಜಿ.ಸಿ. ಚಂದ್ರಶೇಖರ್ ಅವರ ಹೆಸರನ್ನು ಪಕ್ಷದ ನಾಯಕರು ಹೈಕಮಾಂಡ್ಗೆ ಶಿಫಾರಸು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕುರುಬ ಸಮುದಾಯದ ಪ್ರಬಲ ನಾಯಕ ಸಿದ್ದರಾಮಯ್ಯ ಅವರ ಶಾಸಕಾಂಗ ಪಕ್ಷದ ನಾಯಕತ್ವ,ಲೋಕಸಭೆಯಲ್ಲಿ ದಲಿತ ಬಲಗೈ ಸಮುದಾಯದ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವ ಇದೆ. ಕಾಂಗ್ರೆಸ್ ಜತೆಗೆ ಗುರುತಿಸಿಕೊಂಡಿರುವ ಸಮುದಾಯಕ್ಕೆ ಕಾರ್ಯಾಧ್ಯಕ್ಷ ಸ್ಥಾನಗಳಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ, ಆ ಸಮುದಾಯಗಳನ್ನು ಓಲೈಸುವ ಲೆಕ್ಕಾಚಾರ ಇದರ ಹಿಂದಿದೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.