ಬೆಂಗಳೂರು: ‘ನಗರ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಮೇಲ್ಸೇತುವೆಗೆ (ಎಲಿವೇಟೆಡ್ ಕಾರಿಡಾರ್) ಸಂಬಂಧಿಸಿದ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು’ ಎಂದು ಹೈಕೋರ್ಟ್ ಆದೇಶಿಸಿದೆ.
ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಡಿ.ನಾಗರಾಜ್ ಅವರು, ‘ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದೆ’ ಎಂದರು.
ಇದಕ್ಕೆ ನ್ಯಾಯಪೀಠವು, ‘ಒಂದು ವೇಳೆ ಟೆಂಡರ್ ಪ್ರಕ್ರಿಯೆ ಮುಕ್ತಾಯವಾಗಿದ್ದರೆ ಮುಂದಿನ ವಿಚಾರಣೆ ವೇಳೆಯ ತನಕ ಯಾವುದೇ ಕಾಮಗಾರಿ ಕೈಗೊಳ್ಳಬಾರದು’ ಎಂದು ಆದೇಶಿಸಿತು.
ಬೆಂಗಳೂರು ಮಹಾನಗರ ಯೋಜನಾ ಸಮಿತಿ (ಬಿಎಂಪಿಸಿ) ರಚನೆ ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಪ್ರತಿನಿಧಿ ಶ್ರೀಧರ ಪಬ್ಬಿಶೆಟ್ಟಿ ಮತ್ತು ಸಿಟಿಜನ್ ಆ್ಯಕ್ಷನ್ ಫೋರಂ ಪ್ರತಿನಿಧಿ ವಿಜಯನ್ ಮೆನನ್ ಸಲ್ಲಿಸಿರುವ ಅರ್ಜಿ ಇದಾಗಿದೆ.
ಬಿಎಂಪಿಸಿಯಲ್ಲಿ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಸೇರ್ಪಡೆ ಮಾಡಿರುವ ಕಾನೂನಿನ ಸಿಂಧುತ್ವವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.