ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ವಿರುದ್ಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.
‘ಪ್ರಕರಣದ ಕುರಿತು ಮರು ತನಿಖೆ ನಡೆಸಲು ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ನಿರ್ದೇಶಿಸಬೇಕು’ ಎಂದು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಬಿಡಿಎ ಪರ ವಕೀಲರು, ‘ವಿವಾದಿತ ಜಮೀನನ್ನು ಆರ್. ಅಶೋಕ ಅವರು ಬಿಡಿಎಗೆ 2011ರಲ್ಲೇ ದಾನಪತ್ರ ಬರೆದುಕೊಟ್ಟಿದ್ದಾರೆ. ಈಗ ಅದು ಬಿಡಿಎ ವಶದಲ್ಲೇ ಇದೆ’ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಬೇಕಿದ್ದರೆ ಅರ್ಜಿದಾರರು ಕಾನೂನಿನ ಪರ್ಯಾಯ ಮಾರ್ಗದ ಮೂಲಕ ತಮ್ಮ ಆಕ್ಷೇಪಣೆಗೆ ಪರಿಹಾರ ಪಡೆಯಬಹುದು’ ಎಂಬ ಅಭಿಪ್ರಾಯದೊಂದಿಗೆ ಅರ್ಜಿ ವಿಲೇವಾರಿ ಮಾಡಿದರು.
‘ನಗರದ ರಾಜಮಹಲ್ ವಿಲಾಸ್ ಬಡಾವಣೆ (ಆರ್.ಎಂ.ವಿ) 2ನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ) ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ’ ಎಂಬುದು ಅರ್ಜಿದಾರರ ಆರೋಪ.