ಬೆಂಗಳೂರು: ಪಾದಚಾರಿ ಮಾರ್ಗವನ್ನು ಆಕ್ರಮಿಸಿಕೊಂಡ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ನಗರದಲ್ಲಿ ಮಂಗಳವಾರ ವಿಶೇಷ ಕಾರ್ಯಾಚರಣೆ ನಡೆಸಿದ ಸಂಚಾರ ಪೊಲೀಸರು, 50ಕ್ಕೂ ಹೆಚ್ಚು ರಸ್ತೆಗಳಲ್ಲಿ ವ್ಯಾಪಾರಿಗಳನ್ನು ತೆರವುಗೊಳಿಸಿದರು.
‘ಪ್ರಜಾವಾಣಿ’ಯುಫುಟ್ಪಾತ್ ಒತ್ತುವರಿ ವಿಷಯವಾಗಿ ‘ನಮ್ಮ ನಗರ ನಮ್ಮ ಧ್ವನಿ’ ಪುಟದಲ್ಲಿ ವಿಸ್ತೃತ ವರದಿ ಪ್ರಕಟಿಸಿತ್ತು. ಅದರ ಬೆನ್ನಲ್ಲೇ ಪೊಲೀಸರು ಮಲ್ಲೇಶ್ವರದ ಸಂಪಿಗೆ ರಸ್ತೆ, ಹೆಬ್ಬಾಳ, ಹೊಸಕೆರೆಹಳ್ಳಿ, ಹಳೇ ವಿಮಾನ ನಿಲ್ದಾಣ ರಸ್ತೆ, ಬೆಳ್ಳಂದೂರು ಹೊರ ವರ್ತುಲ ರಸ್ತೆ, ಬನ್ನೇರುಘಟ್ಟ ರಸ್ತೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಿ 600ಕ್ಕೂ ಹೆಚ್ಚು ವ್ಯಾಪಾರಿಗಳನ್ನು ತೆರವು ಮಾಡಿಸಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ ಜತೆ ಮಾತನಾಡಿದ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಪಿ.ಹರಿಶೇಖರನ್, ‘ವಿಶೇಷ ತಂಡಗಳನ್ನು ರಚಿಸಿ ಹಠಾತ್ ದಾಳಿ ಮಾಡಿಸಿದೆವು. ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು ಮಾತ್ರವಲ್ಲದೆ, ಕೆಲವರು ಪಾದಚಾರಿ ಮಾರ್ಗದಲ್ಲೇ ಬೈಕ್, ಆಟೊ ಹಾಗೂ ಕಾರುಗಳನ್ನು ನಿಲ್ಲಿಸಿದ್ದೂ ಕಂಡು ಬಂತು. ಅವುಗಳನ್ನೂ ತೆರವುಗೊಳಿಸಿ, ವಾಹನಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ’ ಎಂದು ಹೇಳಿದರು.
‘ಫುಟ್ಪಾತ್ ಒತ್ತುವರಿ ಸಂಬಂಧ ಬಿಬಿಎಂಪಿ ಸಿಬ್ಬಂದಿ ಹಾಗೂ ಸಂಚಾರ ಪೊಲೀಸರು ಮೇಲಿಂದ ಮೇಲೆ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಅವರು ಬೆಳಿಗ್ಗೆ ತೆರುವುಗೊಳಿಸಿ ಬಂದರೆ, ಸಂಜೆ ವೇಳೆಗೆ ಮತ್ತೆ ವ್ಯಾಪಾರ ಶುರುವಾಗಿಬಿಡುತ್ತದೆ. ಈ ಕಾರಣದಿಂದ ಇನ್ನು ಮುಂದೆ ವ್ಯಾಪಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವ ನಿರ್ಧಾರಕ್ಕೆ ಬಂದಿದ್ದೇವೆ’ ಎಂದು ಮಾಹಿತಿ ನೀಡಿದರು.
ಅಂಗಡಿ ಕಳೆದುಕೊಂಡವರು: ಬಿಬಿಎಂಪಿ ಹಾಗೂ ಬಿಡಿಎ 2014ರಲ್ಲಿ ಮಲ್ಲೇಶ್ವರ ಮಾರುಕಟ್ಟೆಯನ್ನು ಕೆಡವಿ ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಕಾಮಗಾರಿ ಆರಂಭಿಸಿದ್ದವು. ಆದರೆ, ಆ ಕಾಮಗಾರಿ ಅರ್ಧಕ್ಕೇ ನಿಂತಿತ್ತು. ಅಂಗಡಿ ಕಳೆದುಕೊಂಡ ಅಲ್ಲಿನ ವ್ಯಾಪಾರಿಗಳು, ಫುಟ್ಪಾತ್ ಮೇಲೇ ವ್ಯಾಪಾರ ಪ್ರಾರಂಭಿಸಿದ್ದರು. ಕ್ರಮೇಣ ಅದು ರಸ್ತೆವರೆಗೂ ಹಬ್ಬಿತ್ತು. ಈ ಕುರಿತೂ ‘ಪ್ರಜಾವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.