ಬೆಂಗಳೂರು: ವೈಜ್ಞಾನಿಕವಾಗಿ ಕಸ ನಿರ್ವಹಣೆ ಮಾಡುವ ಕುರಿತು ಅಧ್ಯಯನ ನಡೆಸುವ ಸಲುವಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಅವರು ಫ್ರಾನ್ಸ್ ಪ್ರವಾಸ ಕೈಗೊಂಡಿದ್ದಾರೆ.
‘ಬೆಂಗಳೂರು ನಗರದಲ್ಲಿ ಕಸ ವಿಲೇವಾರಿ ದೊಡ್ಡ ಸವಾಲಿನ ಕೆಲಸ. ಫ್ರಾನ್ಸ್ನಲ್ಲಿ ಕಸ ವಿಲೇವಾರಿ ವೈಜ್ಞಾನಿಕವಾಗಿ ನಡೆಯುತ್ತಿದೆ. ಇಲ್ಲಿನ ತಂತ್ರಜ್ಞಾನವನ್ನು ನಮ್ಮಲ್ಲೂ ಅಳವಡಿಸಿಕೊಳ್ಳಲು ಅವಕಾಶ ಇದೆ’ ಎಂದು ಪರಮೇಶ್ವರ ತಿಳಿಸಿದರು.
‘ನಮ್ಮಲ್ಲೂ ಹಸಿ ಕಸ ಹಾಗೂ ಒಣ ಕಸ ವಿಂಗಡಿಸುವುದನ್ನು 2013ರಿಂದಲೇ ಕಡ್ಡಾಯ ಮಾಡಲಾಗಿದೆ. ಆದರೂ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಇನ್ನೂ ಸಾಧ್ಯವಾಗಿಲ್ಲ. ಫ್ರಾನ್ಸ್ನಲ್ಲಿ ಶೇ 90ರಷ್ಟು ಕಸ ಮೂಲದಲ್ಲೇ ವಿಂಗಡಣೆಯಾಗುತ್ತಿದೆ. ನಾವೂ ಈ ನಿಟ್ಟಿನಲ್ಲಿ ಮುಂದುವರಿಯಬೇಕಿದೆ’ ಎಂದರು.