ಬೆಂಗಳೂರು: ‘ಜಿಲ್ಲೆಯಾದ್ಯಂತ ಸೆಪ್ಟೆಂಬರ್ ತಿಂಗಳಲ್ಲಿಜಂತುಹುಳು ನಿವಾರಣಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 11.82 ಲಕ್ಷ ಮಕ್ಕಳಿಗೆ ಮಾತ್ರೆ ನೀಡುವ ಗುರಿ ಹೊಂದಿದ್ದೇವೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ಅರ್ಚನಾ ಮಾಹಿತಿ ನೀಡಿದರು.
ಜಂತುಹುಳು ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆ ಹಾಗೂ ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಮಕ್ಕಳಲ್ಲಿ ಕಂಡುಬರುವ ಜಂತುಹುಳುವಿನ ಬಾಧೆಯಿಂದ ರಕ್ತಹೀನತೆ ಮತ್ತು ಪೌಷ್ಟಿಕಾಂಶದ ಕೊರತೆ ಉಂಟಾಗುತ್ತದೆ. 1ರಿಂದ 2 ವರ್ಷದೊಳಗಿನ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ2ರಿಂದ 19 ವರ್ಷದೊಳಗಿನ ಮಕ್ಕಳಿಗೆ ಒಂದು ಮಾತ್ರೆಯನ್ನು ನೀಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾತ್ರೆ ನೀಡುವ ಬಗ್ಗೆ ತರಬೇತಿ ನೀಡಲಾಗುತ್ತದೆ’ ಎಂದರು.
‘ಜಿಲ್ಲೆಯಲ್ಲಿ ಅಂದಾಜು 2 ಸಾವಿರ ಅಂಗನವಾಡಿ ಕೇಂದ್ರಗಳಿವೆ. ವಯಸ್ಸಿಗೆ ತಕ್ಕಂತೆ ತೂಕ ಹಾಗೂ ಬೆಳವಣಿಗೆಯನ್ನು ಮಕ್ಕಳು ಹೊಂದುತ್ತಿದ್ದಾರೆಯೇ ಎಂದು ಪರೀಕ್ಷಿಸಲಾಗುತ್ತದೆ.ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಚಿಕಿತ್ಸೆಗೆ ಕಳುಹಿಸಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕಾಗುತ್ತದೆ’ ಎಂದರು.