ಬೆಂಗಳೂರು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆಯುತ್ತಿದ್ದಂತೆ ದೇಶದಾದ್ಯಂತ ಕಟ್ಟೆಚ್ಚರ ಘೋಷಿಸಲಾಗಿದ್ದು, ರಾಜ್ಯದಲ್ಲೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಎಲ್ಲ ರಾಜ್ಯಗಳಿಗೆ ತುರ್ತು ಸಂದೇಶ ರವಾನಿಸಿರುವ ಕೇಂದ್ರ ಗೃಹ ಇಲಾಖೆ, ‘ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಮಾಜ ವಿರೋಧಿ ಶಕ್ತಿಗಳು, ದುಷ್ಕೃತ್ಯ ಎಸಗುವ ಸಾಧ್ಯತೆ ಇದೆ. ನಿಮ್ಮ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಿ’ ಎಂದು ಸೂಚಿಸಿದೆ.
‘ಬಸ್, ರೈಲು, ವಿಮಾನ ನಿಲ್ದಾಣ ಸೇರಿದಂತೆ ಎಲ್ಲ ಸಾರ್ವಜನಿಕರ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಯಾವುದೇ ಅವಘಡಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ’ ಎಂದು ಗೃಹ ಇಲಾಖೆ ನಿರ್ದೇಶನ ನೀಡಿದೆ.
ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ತೀವ್ರ ನಿಗಾ ವಹಿಸಲಾಗಿದೆ. ಜಿಲ್ಲಾವಾರು ಭದ್ರತೆ ಹೊಣೆಯನ್ನು ಜಿಲ್ಲಾ ಎಸ್ಪಿಗಳಿಗೆ ವಹಿಸಲಾಗಿದೆ.