ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರು ತಮ್ಮ ಆಸ್ತಿ ಹಾಗೂ ಸಾಲದ ವಿವರಗಳ ಮಾಹಿತಿ ಸಲ್ಲಿಸಲು ಹೈಕೋರ್ಟ್ ಇನ್ನೂ ಎರಡು ವಾರಗಳ ಕಾಲಾವಕಾಶ ನೀಡಿದೆ.
ಈ ಕುರಿತಂತೆ ಅನಿಲ್ ಕುಮಾರ್ ಶೆಟ್ಟಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಬಿಬಿಎಂಪಿ ಪರ ಹಾಜರಿದ್ದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ‘ಪಾಲಿಕೆ ಸದಸ್ಯರು ತಮ್ಮ ಆಸ್ತಿಪಾಸ್ತಿ ಹಾಗೂ ಸಾಲದ ವಿವರಗಳ ಮಾಹಿತಿ ಕ್ರೋಡೀಕರಣಕ್ಕೆ ಇನ್ನಷ್ಟು ಸಮಯ ಬೇಕು’ ಎಂದು ಕೋರಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ವಿಚಾರಣೆಯನ್ನು ಇದೇ 25ಕ್ಕೆ ಮುಂದೂಡಿದೆ.
‘ಕರ್ನಾಟಕ ಪೌರಾಡಳಿತ ಕಾಯ್ದೆ–1979ರ ಅನ್ವಯ, ನಿಗದಿತ ಸಮಯದಲ್ಲಿ ಆಸ್ತಿ ವಿವರ ಘೋಷಿಸಿಕೊಳ್ಳದ 34 ಪಾಲಿಕೆ ಸದಸ್ಯರ ಸದಸ್ಯತ್ವ ಅನೂರ್ಜಿಗೊಳಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.