ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಒಪಿ ವಿಗ್ರಹ ಮಾರಿದರೆ ಕಾನೂನು ಕ್ರಮ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ
Last Updated 7 ಆಗಸ್ಟ್ 2019, 20:30 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ (ಪಿಒಪಿ) ತಯಾರಿಸಿದ ಗಣೇಶ ವಿಗ್ರಹಗಳ ಮಾರಾಟವನ್ನು ನಿಷೇಧಿಸಲಾಗಿದೆ. ಇವುಗಳ ಮಾರಾಟ ಮಾಡಿದರೆ ಕಾನೂನು ಕ್ರಮ ಕೈಗೊಳ್ಳ ಲಾಗುವುದು’ ಎಂದುಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಎಚ್ಚರಿಕೆ ನೀಡಿದೆ.

ಜಲಮೂಲಗಳನ್ನು ಮಾಲಿನ್ಯದಿಂದ ರಕ್ಷಿಸುವ ನಿಟ್ಟಿನಲ್ಲಿ ಪಿಒಪಿ ಗಣೇಶ ವಿಗ್ರಹಗಳು ಮಾರುಕಟ್ಟೆಗೆ ಪ್ರವೇಶಿಸದಂತೆ ಕ್ರಮವಹಿಸಲು ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳಿಗೆ ಮಂಡಳಿಯು ಸೂಚಿಸಿದೆ. ಹೊರ ರಾಜ್ಯ, ಜಿಲ್ಲೆಗಳಿಂದ ಪ್ರವೇಶಿಸುವ ವಿಗ್ರಹಗಳ ಮೇಲೂ ನಿಗಾ ಇಡುವಂತೆಯೂ ಚೆಕ್‌ಪೋಸ್ಟ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

‘ಪಿಒಪಿ ವಿಗ್ರಹಗಳಿಗೆ ಬಳಸುವ ರಾಸಾಯನಿಕ ಬಣ್ಣಗಳು ಇಂತಹ ಮೂರ್ತಿಗಳನ್ನು ವಿಸರ್ಜಿಸುವ ಕೆರೆಗಳಲ್ಲಿ ಜಲಮಾಲಿನ್ಯ ಉಂಟುಮಾಡುತ್ತವೆ. ಜಲಮೂಲಗಳನ್ನೇ ಅವಲಂಬಿಸಿರುವ ಪ್ರಾಣಿ–ಪಕ್ಷಿಗಳು ಮತ್ತು ಇತರೆ ಜಲಚರಗಳ ಜೀವಕ್ಕೆ ಇದರಿಂದ ಅಪಾಯ ಉಂಟಾಗುತ್ತದೆ. ಪರಿಸರ ಮತ್ತು ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆಯಾಗುತ್ತದೆ’ ಎಂದುಮಂಡಳಿಯ ಅಧ್ಯಕ್ಷ ಕೆ. ಸುಧಾಕರ್ ತಿಳಿಸಿದರು.

‘ಪಿಒಪಿ ಗಣೇಶ ವಿಗ್ರಹಗಳನ್ನು ತಯಾರಿಸಬಾರದು. ಜಲಮೂಲದಲ್ಲಿ ಇಂತಹ ವಿಗ್ರಹಗಳುವಿಸರ್ಜನೆಯಾಗದ ರೀತಿಯಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸುವವರಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 1860 ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಪಿಒಪಿಯಿಂದ ತಯಾರಿಸಿದ ವಿಗ್ರಹಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಕಳೆದ ವರ್ಷವೇ ಸೂಚಿಸಲಾಗಿತ್ತು. ಆದರೆ, ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯದಿಂದಾಗಿ ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಆಗಿರಲಿಲ್ಲ. ಹಬ್ಬದ ಕೊನೆಯ ಕ್ಷಣದವರೆಗೆ ಸುಮ್ಮನಿದ್ದ ಅಧಿಕಾರಿಗಳು ನಂತರ ಕ್ರಮಕ್ಕೆ ಮುಂದಾಗಿದ್ದರು. ಇದರಿಂದ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು. ಈ ಬಾರಿ ನಿಷೇಧ ಕಟ್ಟುನಿಟ್ಟಾಗಿ ಜಾರಿಯಾಗಬೇಕು. ನಿರ್ಲಕ್ಷ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ’ ಎಂದರು.

ಕೆಎಸ್‌ಪಿಸಿಬಿ ನೀಡಿರುವ ಪ್ರಮುಖ ಸೂಚನೆಗಳು

* ಪಿಒಪಿ ವಿಗ್ರಹ ತಯಾರಿಸುವ, ಮಾರಾಟಮಾಡುವ ವ್ಯಕ್ತಿ ಮತ್ತು ಸಂಸ್ಥೆಗೆ ವ್ಯಾಪಾರ ಪರವಾನಗಿ ನೀಡಕೂಡದು.

* ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಗೌರಿ ಗಣೇಶ ಹಬ್ಬ ಆಚರಿಸಿ, ಸ್ಥಳೀಯ ಆಡಳಿತ ಸಂಸ್ಥೆಗಳು ನಿಗದಿಪಡಿಸಿದ ಸ್ಥಳಗಳಲ್ಲೇ ಮೂರ್ತಿಗಳನ್ನು ವಿಸರ್ಜಿಸಬೇಕು.

* ಮಣ್ಣಿನ ಗಣೇಶ ವಿಗ್ರಹಗಳ ವಿಸರ್ಜನೆ ಸಂದರ್ಭದಲ್ಲಿ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣಗಳನ್ನು ಪ್ರತ್ಯೇಕ ಪಡಿಸಿ ವಿಸರ್ಜಿಸಬೇಕು.

* ಬೆಂಗಳೂರು ನಗರದಲ್ಲಿ ಕೆರೆಗಳು, ಕಲ್ಯಾಣಿಗಳನ್ನು ಪ್ರತಿ ವಾರ್ಡ್‍ನಲ್ಲಿ ಗುರುತಿಸಿ, ವಿಗ್ರಹಗಳ ವಿಸರ್ಜನೆಗೆ ಕ್ರಮ ವಹಿಸಬೇಕು.

* ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸಲು ಅನುಮತಿ ನೀಡಬೇಕು.

* ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳಿಗೆ ಪ್ರತಿ ಸಮಿತಿಯವರು ಕಡ್ಡಾಯವಾಗಿ ಕೆಎಸ್‌ಪಿಸಿಬಿ, ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಯನ್ನು ಪಡೆಯಬೇಕು.

* ನಿರ್ದಿಷ್ಟ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ವಿಲೇವಾರಿ ಮಾಡಲು ನಿರ್ದಿಷ್ಟ ಜಲಮೂಲಗಳನ್ನು ನಿಗದಿಪಡಿಸಿ, ಈ ಬಗ್ಗೆ ಪ್ರಕಟಣೆ ಹೊರಡಿಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT