ಬೆಂಗಳೂರು: ಎರಡನೇ ಹಂತದ ನಗರಗಳಲ್ಲಿ ಐಟಿ ಮತ್ತು ಬಿಟಿ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆಪೂರಕವಾಗಿ ನೂತನ ಮಾಹಿತಿ ತಂತ್ರಜ್ಞಾನ ನೀತಿಯನ್ನು ಪ್ರಕಟಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ವಿಶೇಷವಾಗಿ ಕೃತಕ ಬುದ್ಧಿಮತ್ತೆ, ಯಂತ್ರ ಕಲಿಕೆ ಮತ್ತು ವರ್ಚುವಲ್ ರಿಯಾಲಿಟಿಯಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಕ್ಷೇತ್ರಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ರಾಜ್ಯ ಸರ್ಕಾರದ 15ನೇ ವಿಷನ್ ಗ್ರೂಪ್ ಸಭೆಯಲ್ಲಿ ಐಟಿ, ಬಿಟಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ತಿಳಿಸಿದರು.
ಎಲ್ಲ ಆಧುನಿಕ ತಂತ್ರಜ್ಞಾನಕ್ಕೆ ಪೂರಕವಾಗಿ ಮಾಹಿತಿ ತಂತ್ರಜ್ಞಾನ ನೀತಿಯನ್ನು ಪರಿಷ್ಕರಿಸಲಾಗುವುದು. ಅಲ್ಲದೆ, ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನಗಳು, ಸಂಶೋಧನೆ ಮತ್ತು ಅಭಿವೃದ್ಧಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಈ ಕ್ಷೇತ್ರಗಳಲ್ಲಿ ರಾಜ್ಯದ ನಾಯಕತ್ವ ಬಲಪಡಿಲಾಗುವುದು ಎಂದು ಹೇಳಿದರು.
ಈ ವರ್ಷ ನವೆಂಬರ್ 18 ಮತ್ತು 19 ರಂದು ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ನಡೆಯಲಿದೆ. ಈ ಕಾರ್ಯಕ್ರಮ ಇನ್ನಷ್ಟು ದೊಡ್ಡ ಪ್ರಮಾಣದಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಜಾಗತಿಕವಾಗಿ ಬೆಂಗಳೂರಿಗೆ ಮುಂಚೂಣಿ ಸ್ಥಾನ ಲಭಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು.