ಮಡಿಕೇರಿ: ಮೇ ತಿಂಗಳಲ್ಲಿ ಸುರಿದಿದ್ದ ಬೇಸಿಗೆ ಮಳೆಯಲ್ಲಿ ಕುಂಡಾಮೇಸ್ತ್ರಿಯಲ್ಲಿ ತಾತ್ಕಾಲಿಕ ತಡೆಗೋಡೆ (ಸ್ಯಾಂಡ್ ಬ್ಯಾಗ್ನಿಂದ ನಿರ್ಮಿಸಲಾಗಿತ್ತು) ಕೊಚ್ಚಿ ಹೋಗಿತ್ತು. ಇದರಿಂದ ನಗರದ ವಿವಿಧ ಬಡಾವಣೆಗಳಿಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಅಲ್ಲೀಗ ₹ 5 ಕೋಟಿ ವೆಚ್ಚದಲ್ಲಿ ಶಾಶ್ವತ ಚೆಕ್ ಡ್ಯಾಂ ನಿರ್ಮಿಸಲಾಗುತ್ತಿದೆ.
ಕುಂಡಾಮೇಸ್ತ್ರಿ ಯೋಜನೆಯ ಚೆಕ್ ಡ್ಯಾಂ ಕಾಮಗಾರಿಯನ್ನು ಸೋಮವಾರ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು ವೀಕ್ಷಿಸಿ, ಗುಣಮಟ್ಟದ ಕಾಮಗಾರಿಗೆ ಸೂಚಿಸಿದರು.
ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆಯೂ ಸಂಬಂಧಪಟ್ಟ ಎಂಜಿನಿಯರ್ಗೆ ಸೂಚಿಸಿದರು.
ಈಗಾಗಲೇ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕುಂಡಾಮೇಸ್ತ್ರಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಚೆಕ್ಡ್ಯಾಂ ಕಾಮಗಾರಿ ಪ್ರಗತಿಯಲ್ಲಿದೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಎಂಜಿನಿಯರ್ಗೆ ನಿರ್ದೇಶನ ನೀಡಿದ್ದೇನೆ. ಈ ಯೋಜನೆಯನ್ನು ಬಹಳ ನಿರೀಕ್ಷೆಯಿಟ್ಟು ಅನುಷ್ಠಾನ ಮಾಡಲಾಗುತ್ತಿದೆ. ನಗರಕ್ಕೆ ಕುಡಿಯುವ ನೀರು ಹಾಹಾಕಾರ ನೀಗಿಸಲು ಪ್ರಯತ್ನಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಚೆಕ್ ಡ್ಯಾಂ ನಿರ್ಮಾಣ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ. ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಪ್ರಥಮ ಆದ್ಯತೆ ಮತ್ತು ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಅವರು ಹೇಳಿದರು.
ಕುಂಡಾಮೇಸ್ತ್ರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಸಚಿವರು, ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಜೊತೆ ಚರ್ಚಿಸಲಾಗುವುದು. ಎಲ್ಲರ ಸಹಕಾರ ಪಡೆದು ಯೋಜನಾ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದೂ ಹೇಳಿದರು.
ಕುಡಿಯುವ ನೀರು ಯೋಜನೆಯಲ್ಲಿ ಯಾರೂ ರಾಜಕೀಯ ಮಾಡಬಾರದು. ಯೋಜನೆ ಪೂರ್ಣಗೊಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.
ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಪ್ರಸನ್ನ ಮಾತನಾಡಿ, ಕುಂಡಾಮೇಸ್ತ್ರಿ ಕುಡಿಯುವ ನೀರು ಯೋಜನೆಗೆ ₹ 30 ಕೋಟಿ ವ್ಯಯಿಸಲಾಗುತ್ತಿದೆ. ಇದುವರೆಗೆ ₹ 21 ಕೋಟಿ. ಬಿಡುಗಡೆಯಾಗಿದ್ದು, ₹ 5.47 ಕೋಟಿ ಚೆಕ್ ಡ್ಯಾಂ ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
2016ರಿಂದಲೇ ಕುಂಡಾಮೇಸ್ತ್ರಿಯಿಂದ ಕುಡಿಯುವ ನೀರನ್ನು ಕೂಟುಹೊಳೆಗೆ ಪೂರೈಕೆ ಮಾಡಲಾಗುತ್ತಿದೆ. ಕೂಟುಹೊಳೆಯಿಂದ ಮಡಿಕೇರಿ ನಗರಕ್ಕೆ ನೀರು ಸರಬರಾಜಾಗುತ್ತಿದೆ ಎಂದು ಪ್ರಸನ್ನ ತಿಳಿಸಿದರು.
ಬಳಿಕ ಸುನೀಲ್ ಸುಬ್ರಮಣಿ ಅವರು ಕೂಟು ಹೊಳೆಗೆ ಭೇಟಿ ನೀಡಿ ಪರಿಶೀಲಿಸಿದರು. ಹಳೇ ಖಾಸಗಿ ಬಸ್ ನಿಲ್ದಾಣ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. ಬಳಿಕ ಪಂಪಿನ ಕೆರೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ನಗರಸಭೆ ಪೌರಾಯುಕ್ತ ಎಂ.ಎಲ್.ರಮೇಶ್, ಪ್ರಮುಖರಾದ ಪಿ.ಡಿ.ಪೊನ್ನಪ್ಪ, ಟಿ.ಎಸ್.ಪ್ರಕಾಶ್, ಕೆ.ಎಸ್.ರಮೇಶ್, ಶಿವಕುಮಾರಿ, ಅನಿತಾ ಪೂವಯ್ಯ, ಸವಿತಾ ರಾಕೇಶ್, ಮಹೇಶ್ ಜೈನಿ, ಅರುಣ್ ಕುಮಾರ್, ಮನು ಮಂಜುನಾಥ್, ಬಿ.ಕೆ.ಜಗದೀಶ್, ನಗರಸಭೆ ಎಇಇ ನಾಗರಾಜು, ವನಿತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.