ಬೆಂಗಳೂರು: ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 4–ಎ ವಿಸ್ತರಣೆಗಾಗಿ ರಸ್ತೆ ಬದಿಯ ಮರಗಳನ್ನು ಕತ್ತರಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಈ ಕುರಿತಂತೆ ಪರಿಸರವಾದಿ ಸುರೇಶ್ ಹೆಬ್ಳೀಕರ್ ಮತ್ತು ಜೋಸೆಫ್ ಹೂವರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
‘2019ರ ಫೆ. 19ರ ನಂತರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಅನುಮತಿ ಪಡೆಯದೇ ಮರ ಕಡಿದಿರುವ ಬಗ್ಗೆ ಮಾಹಿತಿ ನೀಡಬೇಕು‘ ಎಂದೂ ನ್ಯಾಯಪೀಠ ಸೂಚಿಸಿದೆ.
ಅರ್ಜಿದಾರರ ಮನವಿ: ‘ಪಶ್ಚಿಮ ಘಟ್ಟಕ್ಕೆ ಹೊಂದಿಕೊಂಡಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡರೂ ಅದರಿಂದ ಪ್ರಾಣಿ-ಪಕ್ಷಿಗಳು ಹಾಗೂ ಸಸ್ಯ ಸಂಕುಲಕ್ಕೆ ತೊಂದರೆ ಎದುರಾಗಲಿದೆ. ಆದ್ದರಿಂದ ಅಭಿವೃದ್ಧಿ ಕಾರ್ಯಕ್ಕೆ ತಡೆ ನೀಡಬೇಕು’ ಎಂಬುದು ಅರ್ಜಿದಾರರ ಮನವಿ.