ಬೆಂಗಳೂರು: ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಜನತಾ ಬಜಾರ್ (ಏಷಿಯಾಟಿಕ್ ಬಿಲ್ಡಿಂಗ್) ಕಟ್ಟಡ ತೆರವುಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಈ ಕುರಿತಂತೆ ಸ್ವಯಂ ಸೇವಾ ಸಂಸ್ಥೆ ‘ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್’ ಪ್ರತಿನಿಧಿ ಡಾ.ಮೀರಾ ಅಯ್ಯರ್ ಸಲ್ಲಿಸಿರುವ ಸಾರ್ಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಕೋರಿಕೆ ಏನು?: ‘ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು (ಬಿಡಿಎ) ತನ್ನ ಪರಿಷ್ಕೃತ ಮಾಸ್ಟರ್ ಪ್ಲಾನ್ನಲ್ಲಿ ಜನತಾ ಬಜಾರ್ ಅನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದೆ. ಆದ್ದರಿಂದ, ಮಾಸ್ಟರ್ ಪ್ಲಾನ್ ಅಂತಿಮವಾಗುವವರೆಗೆ ಕಟ್ಟಡ ತೆರವು ಮಾಡದಂತೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.