ಬೆಂಗಳೂರು: ‘ರಾಜ್ಯ ಸರ್ಕಾರ ರೂಪಿಸಿದ ಬಡ್ತಿ ಮೀಸಲಾತಿ ಕಾಯ್ದೆ–2018 ಅನ್ನು ಅನುಷ್ಠಾನಗೊಳಿಸಲು ಯಾವುದೇ ಅಡ್ಡಿ ಇಲ್ಲ’ ಎಂದು ನಿವೃತ್ತ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅಭಿಪ್ರಾಯ ನೀಡಿದ್ದಾರೆ.
ರಾಜ್ಯ ಸರ್ಕಾರದ ‘ಬಡ್ತಿ ಮೀಸಲು– ಕಾಯ್ದೆ 2002’ ಅನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ 2017ರ ಫೆ. 9 ನೀಡಿದ್ದ ತೀರ್ಪು ಪಾಲನೆ ಆಗಿಲ್ಲ ಎಂದು ಸಲ್ಲಿಸಿದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಯುತ್ತಿರುವ ಮಧ್ಯೆ ಹೊಸ ಕಾಯ್ದೆಯನ್ನು ರೂಪಿಸಲಾಗಿತ್ತು.
ಪ್ರಕರಣ ವಿಚಾರಣಾ ಹಂತದಲ್ಲಿರುವಾಗ ಹೊಸ ಕಾಯ್ದೆ ಅನುಷ್ಠಾನಗೊಳಿಸಬಹುದೇ ಎಂದು ರಾಜ್ಯದ ಪರ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸುವ ಮುಕುಲ್ ರೋಹಟಗಿ ಅವರಿಂದ ಸರ್ಕಾರ ಅಭಿಪ್ರಾಯ ಕೇಳಿತ್ತು. ಅವರು ಗುರುವಾರ (ಜ.10) ತಮ್ಮ ಅಭಿಪ್ರಾಯ ನೀಡಿದ್ದಾರೆ.
‘ಶಾಸನ ಸಭೆಯಲ್ಲಿ ಅಂಗೀಕಾರಗೊಂಡ ಕಾಯ್ದೆಯನ್ನು ಜಾರಿಗೊಳಿಸುವುದು ರಾಜ್ಯ ಸರ್ಕಾರದ ಕರ್ತವ್ಯ. ಅದನ್ನು ಬಿಟ್ಟು ಅನ್ಯ ದಾರಿ ಇಲ್ಲ. ಆದರೆ ಕಾಯ್ದೆ ಅವಧಿಯನ್ನು ಕೋರ್ಟ್ ನಿರ್ಣಯಿಸಲಿದೆ’ ಎಂದೂ ಅವರು ತಿಳಿಸಿದ್ದಾರೆ.
ಆದರೆ ಕಾಯ್ದೆ ಜಾರಿಗೊಳಿಸದಂತೆ ಆಗ್ರಹಿಸಿದ ಇದೇ 11ರಂದು ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲು ಅಲ್ಪಸಂಖ್ಯಾತ, ಹಿಂದುಳಿದ ಮತ್ತು ಸಾಮಾನ್ಯ ವರ್ಗಗಳ (ಅಹಿಂಸಾ) ನೌಕರರ ಒಕ್ಕೂಟ ನಿರ್ಧರಿಸಿದೆ.