ಬೆಂಗಳೂರು: ಇಂದಿರಾ ನಗರದ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಪಬ್ ಮತ್ತು ಬಾರ್ಗಳಿಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಇಂದಿರಾನಗರದ ‘ಡಿಫೆನ್ಸ್ ಕಾಲೊನಿ ರೆಸಿಡೆಂಟ್ಸ್ ಅಸೋಸಿಯೇಷನ್’ ಸಲ್ಲಿಸಿರುವ ಈ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಬಿಡಿಎ), ಅಬಕಾರಿ ಆಯುಕ್ತರು ಮತ್ತು ನಗರ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.
ನಾಲ್ಕು ವಾರಗಳಲ್ಲಿ ವಸ್ಥುಸ್ಥಿತಿ ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ.
ಆಕ್ಷೇಪ ಏನು?:ಇಂದಿರಾ ನಗರದಲ್ಲಿನ 80 ಪಬ್ ಮತ್ತು ಬಾರ್ಗಳಿಂದ ಈ ಪ್ರದೇಶದಲ್ಲಿ ಶಬ್ದ, ವಾಯು ಮಾಲಿನ್ಯದ ಮತ್ತು ವಾಹನಗಳ ಪಾರ್ಕಿಂಗ್ ಸಮಸ್ಯೆ ತಲೆದೋರಿದೆ. ಇದು ಸ್ಥಳೀಯ ನಿವಾಸಿಗಳಿಗೆ ತೊಂದರೆ ಉಂಟು ಮಾಡುತ್ತಿದೆ" ಎಂಬುದು ಅರ್ಜಿದಾರರ ಆಕ್ಷೇಪ.