ಬೆಂಗಳೂರು: 2016ನೇ ಸಾಲಿನಲ್ಲಿ ನಡೆದ ದ್ವಿತೀಯ ಪಿ.ಯು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.
ಜಾಮೀನು ಕೋರಿದ್ದ ನಾಗೇಂದ್ರ, ತಿಮ್ಮೇಗೌಡ ಅಲಿಯಾಸ್ ತಿಬ್ಬೇಗೌಡ ಅವರ ಅರ್ಜಿಗಳನ್ನು ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.
₹2 ಲಕ್ಷ ಮೊತ್ತದ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡುವಂತೆ ಷರತ್ತು ವಿಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಿಗೆ ಈಗಾಗಲೇ ಜಾಮೀನು ನೀಡಿರುವುದನ್ನು ಪರಿಗಣಿಸಿ ಈ ಇಬ್ಬರೂ ಆರೋಪಿಗಳಿಗೆ ಜಾಮೀನು ನೀಡಿದೆ.
ಇಬ್ಬರೂ ಆರೋಪಿಗಳು ಮೈಸೂರಿನವರಾಗಿದ್ದು ಅವರನ್ನು 2016ರ ಏಪ್ರಿಲ್ 18 ರಂದು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.
ಸಿಐಡಿ ಪೊಲೀಸರು ಇವರ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ಕೃತ್ಯಗಳ ನಿಯಂತ್ರಣ ಕಾಯ್ದೆ) ಅಡಿ ಪ್ರಕರಣ ದಾಖಲಿಸಿದ್ದರು.