ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಿಯಾದ ವಿಳಾಸ ನೀಡಿದರೆ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಗತಿ ವರದಿಯನ್ನು ಅಂಚೆ ಮೂಲಕ ಕಳುಹಿಸಿಕೊಡುತ್ತೇನೆ’ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಸವಾಲು ಎಸೆದರು.
ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯವರು ಕೆಲಸ ಮಾಡದೆ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಗತಿ ವರದಿಯನ್ನು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಳುಹಿಸಬೇಕೋ ಅಥವಾ ಬೇರೆಲ್ಲಿಗಾದರೂ ಕಳುಹಿಸಬೇಕೋ ಎಂಬುದನ್ನು ಅವರೇ ತಿಳಿಸಲಿ’ ಎಂದರು.
‘ಸಿದ್ದರಾಮಯ್ಯ ಭ್ರಮನಿರಸನಗೊಂಡು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಮೋದಿ ಅವರು ದೇಶದ 130 ಕೋಟಿ ಜನರಿಗೂ ಚೌಕಿದಾರರು. ಅದರಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಹ ಸೇರಿದ್ದಾರೆ’ ಎಂದರು.