ಬೆಂಗಳೂರು: ಇತ್ತೀಚೆಗಷ್ಟೇ ಹೈಕೋರ್ಟ್ಗೆ 18 ವಕೀಲರನ್ನು ‘ಹಿರಿಯ ವಕೀಲ’ರನ್ನಾಗಿ ನಿಯುಕ್ತಿ ಮಾಡಿದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.
ಈ ಕುರಿತಂತೆ ಹೈಕೋರ್ಟ್ ವಕೀಲರಾದ ಟಿ.ಎನ್.ರಘುಪತಿ ಸಲ್ಲಿಸಿರುವ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ನಿಯುಕ್ತಿಗೊಂಡಿರುವ 18 ಹಿರಿಯ ವಕೀಲರು ಮತ್ತು ಕೇಂದ್ರ ಕಾನೂನು ಸಚಿವಾಲಯದ ಕಾರ್ಯದರ್ಶಿಗೂ ನೋಟಿಸ್ ಜಾರಿಗೆ ಆದೇಶಿಸಲಾಗಿದೆ.
‘ಹಿರಿಯ ವಕೀಲರ ನಿಯುಕ್ತಿ ಪ್ರಕ್ರಿಯೆ ವಕೀಲರ ಕಾಯ್ದೆ ಕಲಂ 16 (2)ಕ್ಕೆ ವಿರುದ್ಧವಾಗಿದೆ. ವಕೀಲಿ ವೃತ್ತಿಯ ಹಿರಿತನವನ್ನು ಕಡೆಗಣಿಸಲಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.