ಬೆಂಗಳೂರು: ರಾಜ್ಯ ವಕ್ಫ್ ಮಂಡಳಿಗೆ ಆಡಳಿತಾಧಿಕಾರಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ವಿಜಯಪುರ ಜಿಲ್ಲೆ ಸಿಂದಗಿಯ ಅಂಜುಮನ್-ಎ-ಇಸ್ಲಾಂ ಸಂಸ್ಥೆ ಸಲ್ಲಿಸಿರುವ ಈ ಪಿಐಎಲ್ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ವಕ್ಫ್ ಮಂಡಳಿಗೆ ಹಿರಿಯ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ 2018ರ ಸೆಪ್ಟೆಂಬರ್ 4ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.
‘ರಾಜ್ಯ ಸರ್ಕಾರ ವಕ್ಫ್ ಮಂಡಳಿಯನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಆಡಳಿತಾಧಿಕಾರಿ ನೇಮಕ ಮಾಡಿದೆ. ಸ್ವಾಯತ್ತ ಸಂಸ್ಥೆ ಎನಿಸಿರುವ ವಕ್ಫ್ ಮಂಡಳಿಗೆ ಶೀಘ್ರವೇ ಸದಸ್ಯರನ್ನೊಳಗೊಂಡ ಮಂಡಳಿ(ಬೋರ್ಡ್) ರಚನೆ ಮಾಡುವಂತೆ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂಬುದು ಅರ್ಜಿದಾರರ ಕೋರಿಕೆ.