ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಈ ಸಲ ಶತಾಯಗತಾಯ ಕಮಲ ಅರಳಿಸಲೇಬೇಕು ಎಂದು ಪಣ ತೊಟ್ಟಿರುವ ಬಿಜೆಪಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನೇ ಪ್ರಚಾರದ ಕಣಕ್ಕೆ ಇಳಿಸಿದೆ.
ಶಾ ಅವರು ಬುಧವಾರ ಯಲಹಂಕದ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋ ನಡೆಸುವ ಮೂಲಕ ಕಾರ್ಯಕರ್ತರಲ್ಲಿ ಹುರುಪು ತುಂಬುವುದರ ಜತೆಗೆ ಶಕ್ತಿ ಪ್ರದರ್ಶನವನ್ನೂ ಮಾಡಿದರು. ಸಂಜೆ 6.25ಕ್ಕೆ ಕೊಂಡಪ್ಪ ಬಡಾವಣೆಯಲ್ಲಿ ಆರಂಭವಾದ ರೋಡ್ ಶೋ ಸುಮಾರು ಒಂದೂವರೆ ಕಿ.ಮೀ. ಸಾಗಿ ಕೆಂಪೇಗೌಡರ ಪ್ರತಿಮೆ ಬಳಿ ಕೊನೆಗೊಂಡಿತು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾವಿರಾರು ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಜಯಘೋಷ ಮೊಳಗಿಸುತ್ತಾ ಭಾಗವಹಿಸಿದರು.
ನಿಗದಿಯಾಗಿದ್ದ ರೋಡ್ ಶೋ ಸುಮಾರು ಒಂದೂವರೆ ಗಂಟೆ ವಿಳಂಬವಾಗಿ ಆರಂಭವಾಯಿತು. ಶಾ ಬರುತ್ತಿದ್ದಂತೆ ಅಲ್ಲಿ ಸೇರಿದ್ದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಮತ್ತು ಶಾ ಅವರಿಗೆ ಜೈಕಾರ ಕೂಗಿದರು. ಇದರ ಜತೆ ‘ಮತ್ತೊಮ್ಮೆ ಮೋದಿ’ ಎಂಬ ಘೋಷವಾಕ್ಯ ಮೊಳಗಿಸುವ ಮೂಲಕ ಜನರಲ್ಲಿ ಹುರುಪು ತುಂಬಿದರು. ರಸ್ತೆಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಹೂ ಎರಚಿ ಅಭಿಮಾನ ಮೆರೆದರು.
ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ ರಾವ್, ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಶಾಸಕ ಎಸ್.ಆರ್.ವಿಶ್ವನಾಥ್ ಇದ್ದರು.
ಕಾಂಗ್ರೆಸ್ನ ವೀರಪ್ಪ ಮೊಯಿಲಿ ಅವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಳೆದ ಚುನಾವಣೆಯಲ್ಲಿ 9 ಸಾವಿರ ಮತಗಳ ಅಂತರದಿಂದ ಸೋತಿರುವ ಬಚ್ಚೇಗೌಡ ಅವರನ್ನೇ ಬಿಜೆಪಿ ಕಣಕ್ಕೆ ಇಳಿಸಿದೆ.