ಕೋಲಾರ: ‘ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸಮರ್ಪಕವಾಗಿ ಕಾರ್ಯಗತಗೊಳಿಸುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಮುರಳಿರೆಡ್ಡಿ ಹೇಳಿದರು.
ತಾಲ್ಲೂಕಿನ ಮುದುವಾಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಂಗಳವಾರ ನಡೆದ ಗಾಂಧಿ ಜಯಂತಿಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ, ‘ಸರ್ಕಾರದ ಸವಲತ್ತುಗಳು ಫಲಾನುಭವಿ ವಿದ್ಯಾರ್ಥಿಗಳಿಗೆ ಸಿಗದಿದ್ದರೆ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತದೆ’ ಎಂದರು.
‘ಈ ಹಿಂದೆ ಮೂಲಸೌಕರ್ಯ ಕೊರತೆ ನಡುವೆಯೂ ಹಿರಿಯರು ಸುಶಿಕ್ಷಿತರಾಗಿ ಆದರ್ಶ ಜೀವನ ನಡೆಸಿದ್ದಾರೆ. ಜತೆಗೆ ಮುಂದಿನ ಪೀಳಿಗೆಗೆ ಸುಲಭವಾಗಿ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಯೋಜನೆ ರೂಪಿಸಿದ್ದಾರೆ. ಇದಕ್ಕೆ ಪೂರಕವಾಗಿ ಸರ್ಕಾರಗಳು ಹಣಕಾಸು ನೆರವು ನೀಡುತ್ತಿವೆ’ ಎಂದು ತಿಳಿಸಿದರು.
‘ಹಿಂದಿನ ಕಾಲದಲ್ಲಿ ಕಷ್ಟದ ಪರಿಸ್ಥಿತಿಯಲ್ಲಿ ಶಿಕ್ಷಣ ಪಡೆಯಬೇಕಿತ್ತು. ಶಿಕ್ಷಣವು ಉಳ್ಳವರ ಸ್ವತ್ತಾಗಿತ್ತು. ಬಡವರು ಹಾಗೂ ಮಧ್ಯಮ ವರ್ಗದವರಿಗೆ ಶಿಕ್ಷಣ ಸಿಗುತ್ತಿರಲಿಲ್ಲ. ಆದರೆ, ಈಗ ಆ ಪರಿಸ್ಥಿತಿ ಇಲ್ಲ. ಪ್ರತಿ ಮಗುವಿಗೂ ಸಮಾನ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಸರ್ಕಾರ ಏಕರೂಪ ಶಿಕ್ಷಣ ಪದ್ಧತಿ ಜಾರಿಗೊಳಿಸಿದೆ’ ಎಂದು ವಿವರಿಸಿದರು.
ಜಿಲ್ಲಾ ಪಂಚಾಯತಿ ಸದಸ್ಯೆ ಪದ್ಮಾವತಮ್ಮ, ಎಪಿಎಂಸಿ ಮಾಜಿ ಸದಸ್ಯ ಶ್ರೀನಿವಾಸಯ್ಯ, ಶಾಲೆ ಎಸ್ಡಿಎಂಸಿ ಸದಸ್ಯ ನಾರಾಯಣಸ್ವಾಮಿ, ಮುಖ್ಯ ಶಿಕ್ಷಕ ಶಂಕರೇಗೌಡ ಹಾಜರಿದ್ದರು.