ಲಖನೌ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ಸ್ಥಳಕ್ಕೆ ಶನಿವಾರ ಭೇಟಿ ನೀಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಮಜನ್ಮಭೂಮಿ ಸ್ಥಳದಲ್ಲಿ ಲಕ್ಷ್ಮಣ, ಭರತ ಮತ್ತು ಶತ್ರುಘ್ನ ವಿಗ್ರಹಗಳನ್ನು ಹೊಸ ಆಸನದಲ್ಲಿರಿಸಿ ಪೂಜೆ ಮಾಡಿದರು.
ಶನಿವಾರ ಮಧ್ಯಾಹ್ನದ ಹೊತ್ತಿಗೆ ಅಯೋಧ್ಯೆಗೆ ತಲುಪಿದ ಯೋಗಿ, ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಆರತಿ ಬೆಳಗಿದರು. ನಂತರ ರಾಮಮಂದಿರ ನಿರ್ಮಾಣದ ಭೂಮಿಪೂಜೆ ಕುರಿತ ಸಿದ್ಧತೆಗಳನ್ನು ಪರಿಶೀಲಿಸಲು ಕರಸೇವಕ್ ಪುರಂಗೆ ಭೇಟಿ ನೀಡಿದರು.
ಆಗಸ್ಟ್ 5ರಂದು ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಯೋಗಿ ಸಿದ್ಥತೆಗಳನ್ನು ಪರಿಶೀಲಿಸಿದರು.
ಕೊರೊನಾ ಕಾರಣಕ್ಕಾಗಿ ಅಂತರ ಕಾಪಾಡಿಕೊಳ್ಳಲು ಭೂಮಿಪೂಜೆ ಕಾರ್ಯಕ್ರಮಕ್ಕೆ 200 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಸದಸ್ಯರೊಬ್ಬರು ಹೇಳಿದ್ದಾರೆ.