ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲು 'ಭೂಮಿ ಪೂಜೆ' ನೆರವೇರಿಸಲು ಸಿದ್ಧತೆ ನಡೆದಿದೆ. ಅದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರ ಪೈಕಿ 16 ಜನರಿಗೆ ಹಾಗೂ ಒಬ್ಬರು ಪುರೋಹಿತರಿಗೆ ಕೋವಿಡ್–19 ದೃಢಪಟ್ಟಿದೆ.
ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ಭೂಮಿ ಪೂಜೆ ನಡೆಸಲು ಸಿದ್ಧತೆ ನಡೆದಿದೆ. ರಾಮಮಂದಿರ ನಿರ್ಮಾಣವಾಗಲಿರುವ ಸ್ಥಳದಲ್ಲಿ ಭದ್ರತೆಗೆ ನಿಯೋಜನೆಯಾಗಿರುವ 16 ಮಂದಿ ಪೊಲೀಸರಿಗೆ ಹಾಗೂ ಅರ್ಚಕರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು 50 ಜನ ಗಣ್ಯರು ಅಯೋಧ್ಯೆಯ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಕಳೆದ ಶನಿವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ ಜನ್ಮಭೂಮಿ ಪ್ರದೇಶಕ್ಕೆ ಭೇಟಿ ನೀಡಿ ಕಾರ್ಯಕ್ರಮದ ವ್ಯವಸ್ಥೆಗಳ ಪರಿಶೀಲನೆ ನಡೆಸಿದ್ದರು.