ಜೈಪುರ: ರಾಜಸ್ಥಾನದ ಕಾಂಗ್ರೆಸ್ ಶಾಸಕ ಬಾಬುಲಾಲ್ ಅವರಿಗೆ ಶುಕ್ರವಾರ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆಗೆ ಗುರುತಿಸಿಕೊಂಡಿರುವ ಅವರು ಇತರೆ ಶಾಸಕರ ಜೊತೆಗೆ ಇಲ್ಲಿನ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಅವರನ್ನು ಸವಾಯ್ ಮಾನ್ಸಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಆಸ್ತಮಾದಿಂದ ಬಳಲುತ್ತಿದ್ದರು. ಇವರನ್ನು ಬೆಳಿಗ್ಗೆ ಹೋಟೆಲ್ನಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಉಪ ಮುಖ್ಯ ಸಚೇತಕ ಮಹೇಂದ್ರ ಚೌಧರಿ ತಿಳಿಸಿದ್ದಾರೆ.
ಸಚಿನ್ ಪೈಲಟ್ ನೇತೃತ್ವದಲ್ಲಿ 18 ಶಾಸಕರು ಮುಖ್ಯಮಂತ್ರಿ ವಿರುದ್ಧ ಬಂಡಾಯ ಎದ್ದ ಹಿಂದೆಯೇ ಮುಖ್ಯಮಂತ್ರಿಗೆ ನಿಷ್ಠರಾಗಿರುವ ಶಾಸಕರನ್ನು ಇಲ್ಲಿನ ಪಂಚತಾರಾ ಹೋಟೆಲ್ಗೆ ಸ್ಥಳಾಂತರಿಸಲಾಗಿದೆ.