ನವದೆಹಲಿ: ರಾಜಕೀಯ ವಲಯದ ಗಣ್ಯರು, ಕುಟುಂಬಸ್ಥರು ಹಾಗೂ ಸಂಬಂಧಿಗಳು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಅವರಿಗೆ ಸೋಮವಾರ ಅಂತಿಮ ನಮನ ಸಲ್ಲಿಸಿದರು.
ರಾಜ್ಯಸಭಾ ಸದಸ್ಯರಾಗಿದ್ದ ಅಮರ್ ಸಿಂಗ್ ಅವರು ಎರಡು ದಿನಗಳ ಹಿಂದೆ ಸಿಂಗಪುರದ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದರು.
ಭಾನುವಾರ ಸಂಜೆ ವಿಶೇಷ ವಿಮಾನದಲ್ಲಿ ಅವರಪಾರ್ಥಿವ ಶರೀರವನ್ನು ತರಲಾಗಿದ್ದು, ಇಲ್ಲಿನ ಛಾತರ್ಪುರದಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ.
ಛಾತರ್ಪುರದಲ್ಲಿರುವ ಫಾರ್ಮ್ಹೌಸ್ನಲ್ಲಿ ಅಮರ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ನಟಿ ಜಯಪ್ರದಾ ಅವರು ಅಂತಿಮ ದರ್ಶನ ಪಡೆದರು.
ಅಮರ್ ಅವರ ಪತ್ನಿ ಪಂಕಜಾ ಸಿಂಗ್ ಹಾಗೂ ಇಬ್ಬರು ಪುತ್ರಿಯರು ಈ ವೇಳೆ ಇದ್ದರು.
ಕೋವಿಡ್–19 ಹಿನ್ನೆಲೆಯಲ್ಲಿ ಜನ ಗುಂಪು ಸೇರುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಅಮರ್ ಅವರ ಅಂತ್ಯ ಸಂಸ್ಕಾರದ ವೇಳೆ ಆಯ್ದ ಕೆಲ ವ್ಯಕ್ತಿಗಳು ಮಾತ್ರ ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.