ನವದೆಹಲಿ:ಉತ್ತರ ಪ್ರದೇಶದ ಮನಿಯಾ ನಗರ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಮಣಿ ಮಂಜರಿ ರೈ ಆತ್ಮಹತ್ಯೆ ಪ್ರಕರಣ ಕುರಿತುಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒತ್ತಾಯಿಸಿದ್ದಾರೆ.
ಮಣಿ ಮಂಜರಿ ಅವರನ್ನು ಬಾಲಿಯಾಗೆ ವರ್ಗಾಯಿಸಲಾಗಿತ್ತು. ಈ ವೇಳೆ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ್ದರು ಎಂದುಪ್ರಿಯಾಂಕಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ, ‘ಮಣಿ ಮಂಜರಿಯ ಕುಟುಂಬದ ಸದಸ್ಯರು ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ನಾನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ’ ಎಂದು ಹೇಳಿದ್ದಾರೆ.
ಮಣಿ ಮಂಜರಿ ರೈ(27) ಕಳೆದ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ತಂದೆ ಇದು ಕೊಲೆ ಪ್ರಕರಣ ಎಂದು ದೂರಿದ್ದರು.