ಢಾಕಾ: ‘ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ಭಾರತದ ಆಂತರಿಕ ವಿಚಾರಗಳು’ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೊಮೆನ್ ಹೇಳಿದ್ದಾರೆ.
ಈ ವಿಚಾರವಾಗಿ ಭಾರತದಲ್ಲಿ ಅನಿಶ್ಚಿತತೆ ಉಂಟಾದರೆ ಅದು ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಲಿದೆ ಎಂದೂ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಭಾರತದಲ್ಲಿ ಪ್ರತಿಭಟನೆ ತೀವ್ರಗೊಂಡಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ‘ಪರಿಸ್ಥಿತಿ ತಿಳಿಗೊಳ್ಳುವ ವಿಶ್ವಾಸವಿದೆ’ ಎಂದಿದ್ದಾರೆ.
ಭಾರತ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿಯ ಕಾಯ್ದೆಯಲ್ಲಿ ಬಾಂಗ್ಲಾದೇಶದ ವಲಸಿಗರ ಕುರಿತೂ ಉಲ್ಲೇಖವಿದೆ. ಹೀಗಾಗಿ ಬಾಂಗ್ಲಾ ದೇಶದ ನಿಲುವು ಸಹಜವಾಗಿಯೇ ಕುತೂಹಲಕ್ಕೆ ಕಾರಣವಾಗಿದೆ.