ಲಾಹೋರ್:ಪಾಕಿಸ್ತಾನದ ಪಂಜಾಬ್ನ ನನಕಾನಾ ಸಾಹಿಬ್ ಗುರುದ್ವಾರದ ಮೇಲೆ ಇತ್ತೀಚೆಗೆ ನಡೆದ ದಾಳಿಗೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದ್ದು, ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಪೊಲೀಸ್ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಇಮ್ರಾನ್ ಎಂದು ಗುರುತಿಸಲಾಗಿದೆ. ಗುರುದ್ವಾರದ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದನೆ ನೀಡಿದ ಆರೋಪ ಈತನ ಮೇಲಿದೆ.
ದಾಳಿ ಕುರಿತು ಭಾನುವಾರ ಪ್ರತಿಕ್ರಿಯಿಸಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರು.
ಸಿಖ್ ಧರ್ಮೀಯರ ವಿರುದ್ಧ ನಡೆದ ಹಿಂಸಾಚಾರವನ್ನು ಭಾರತ ತೀವ್ರವಾಗಿ ಖಂಡಿಸಿತ್ತು. ಘಟನೆಗೆ ಕಾರಣರಾದವರ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಸರ್ಕಾರವನ್ನು ಆಗ್ರಹಿಸಿತ್ತು.