ಬೆಂಗಳೂರು: ರಾಜ್ಯದಾದ್ಯಂತ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು ಹಾಗೂ ಇತರ ಜಿಲ್ಲೆಗಳಲ್ಲಿ ಆಗಸ್ಟ್ 1ರಂದು ಬಕ್ರೀದ್ ಹಬ್ಬದ ಆಚರಣೆ ನಡೆಯಲಿದ್ದು, ಅಂದು ಈದ್ಗಾ ಮೈದಾನಗಳಲ್ಲಿ ನಡೆಯುವ ಸಾಮೂಹಿಕ ಪ್ರಾರ್ಥನೆಗೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ.
‘ಕೋವಿಡ್ 19 ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಆದೇಶದಲ್ಲಿ ತಿಳಿಸಿದ್ದಾರೆ.
ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಮಸೀದಿಗಳಲ್ಲಿ ಗರಿಷ್ಠ 50 ಜನರು ಮೀರದಂತೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸ ಬಹುದು. ಒಂದೊಮ್ಮೆ ಹೆಚ್ಚು ಜನರು ಮಸೀದಿಗೆ ಬಂದರೆ, ಎರಡು ಅಥವಾ ಮೂರು ತಂಡ ಗಳಾಗಿ ಪ್ರಾರ್ಥನೆ ಸಲ್ಲಿಸಬಹುದು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಪಾಲಿಸಬೇಕಾದ ಷರತ್ತುಗಳು: ಪ್ರಾರ್ಥನೆ ಸಲ್ಲಿಸುವಾಗ ಕಡ್ಡಾಯ ವಾಗಿ ಮಾಸ್ಕ್ ಧರಿಸಬೇಕು. 60 ವರ್ಷ ದಾಟಿದವರು ಮತ್ತು 10 ವರ್ಷ ಒಳಗಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು. ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ಉಷ್ಣತೆಯ ತಪಾಸಣೆ ನಡೆಸಬೇಕು. ಕೈಗ ಳನ್ನು ಸಾಬೂನು ಅಥವಾ ಸಾನಿ ಟೈಸರ್ನಿಂದ ಸ್ವಚ್ಛಗೊಳಿಸಬೇಕು.ಹಸ್ತ ಲಾಘವ ಮತ್ತು ಆಲಿಂಗನಕ್ಕೆ ಅವಕಾಶ ಇಲ್ಲ.