ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿ ತಪ್ಪು ಸಂದೇಶ ಹರಿಬಿಟ್ಟಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.
‘ಸಚಿವರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಘೋಷಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸಚಿವರ ಹೆಸರಿನ ನಕಲಿ ಟ್ವಿಟರ್ ಖಾತೆಯಲ್ಲಿ ‘ಇಂಗ್ಲಿಷ್ ವಿಷಯದಲ್ಲಿ ವಿದ್ಯಾರ್ಥಿಗಳಿಗೆ 26 ಗ್ರೇಸ್ ಅಂಕಗಳನ್ನು ನೀಡುವ ಕುರಿತು ಮೌಲ್ಯಮಾಪಕರಿಗೆ ಸೂಚಿಸಲಾಗಿದೆ’ ಎಂಬ ಸುಳ್ಳು ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ’ ಎಂದು ದೂರಿನಲ್ಲಿ ಅವರು ತಿಳಿಸಿದ್ದಾರೆ.
‘ಈ ನಕಲಿ ಸಂದೇಶದಿಂದ ರಾಜ್ಯದ ಪಿಯು ವಿದ್ಯಾರ್ಥಿಗಳು, ಪೋಷಕರು, ಇಲಾಖೆಯ ಅಧಿಕಾರಿಗಳಲ್ಲಿ ಆತಂಕ, ಗೊಂದಲಗಳಿಗೆ ಕಾರಣವಾಗಿದೆ. ಅಲ್ಲದೆ, ಇದರಿಂದ ಇಲಾಖೆಗೆ ಮುಜುಗರದ ಸನ್ನಿವೇಶ ಸೃಷ್ಟಿಯಾಗಿದೆ’ ಎಂದು ದೂರಿನಲ್ಲಿ ಅವರು ಹೇಳಿದ್ದಾರೆ.
’ನಕಲಿ ಖಾತೆ ತೆರೆದು ಇಲಾಖೆಗೆ ಮುಜುಗರ ತರುವಂಥ ಸಂದೇಶ ಹರಿಯಬಿಟ್ಟ ಕಿಡಿಗೇಡಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಮನವಿ ಮಾಡಿರುವ ಅವರು, ನಕಲಿ ಟ್ವಿಟರ್ ಖಾತೆಯಲ್ಲಿ ಹರಿಯಬಿಟ್ಟ ಸಂದೇಶದ ಪ್ರತಿಯನ್ನು ದೂರಿನ ಜೊತೆ ಲಗತ್ತಿಸಿದ್ದಾರೆ.
ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಜೂನ್ 18ರಂದು ನಡೆದಿದ್ದು, ರಾಜ್ಯದ 20 ಮೌಲ್ಯಮಾಪನ ಕೇಂದ್ರಗಳಲ್ಲಿ ಜೂನ್ 20ರಿಂದ ಜುಲೈ 7ರವರಗೆ ಮೌಲ್ಯಮಾಪನ ಕೂಡಾ ನಡೆದಿದೆ. ಜುಲೈ 14ರಂದು ಫಲಿತಾಂಶ ಪ್ರಕಟಿಸಲಾಗಿದೆ.